ಶಿರಸಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕುಮಾರ ಅಭಿನಯದ `ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಎಂಬ ಹಾಡು ಮೊಳಗಿದ್ದು, ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಹಾಡಿನ ಜೊತೆ ಕುಣಿದು ಕುಪ್ಪಳಿಸಿದರು.
ಶಿರಸಿಯ ಮಾರಿಕಾಂಬಾ ಶಾಲೆಯಲ್ಲಿ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಸಾವಿರಾರು ವಿದ್ಯಾರ್ಥಿಗಳು ಕನ್ನಡ ಕಲರವ ಮೊಳಗಿಸಿದರು. `ಕನ್ನಡದಲ್ಲಿಯೇ ಮಾತನಾಡಿ.. ಕನ್ನಡದಲ್ಲಿಯೇ ವ್ಯವಹರಿಸಿ’ ಎಂದು ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ `ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಅವರು ಹೆಜ್ಜೆ ಹಾಕಿ ಸಂಭ್ರಮಿಸಿದರು. `ರಾಜ್ಯ ಸರ್ಕಾರ ಕನ್ನಡಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಎಲ್ಲರಿಗೂ ಉಚಿತ ಶಿಕ್ಷಣ ನೀಡುತ್ತಿದೆ. ಕನ್ನಡ ಭಾಷೆ ಎಂದೆoದಿಗೂ ಅಮರವಾಗಿರಬೇಕು’ ಎಂದು ಭೀಮಣ್ಣ ನಾಯ್ಕ ಅವರು ಹೇಳಿದರು.
ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಕೆವಿ ಕಾವ್ಯಾರಾಣಿ ಅವರು `ಕದಂಬರ ನಾಡಿನಲ್ಲಿ ಉಪವಿಭಾಗಾಧಿಕಾರಿಯಾಗಿ ಧ್ವಜಾರೋಹಣ ಮಾಡುತ್ತಿರುವುದು ಅತ್ಯಂತ ಹೆಮ್ಮೆ ತಂದಿದೆ’ ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣಪತಿ ಭಟ್ಟ, ಜಿ ಎಂ.ಬೊಮ್ನಳ್ಳಿ, ಕದಂಬ ರತ್ನಾಕರ, ಅನುರಾಧಾ ಹೆಗಡೆ, ಮಧುಕೇಶ್ವರ ನಾಯ್ಕ ಅವರನ್ನು ಗೌರವಿಸಲಾಯಿತು.