ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿನ ಕದಂಬ ನೌಕಾನೆಲೆಗೆ ಆಗಮಿಸಿದ ಅವರು ಜಲಾಂರ್ತಗಾಮಿ ನೌಕೆಯಲ್ಲಿ ಸಂಚಾರ ಮಾಡಿದ್ದಾರೆ.
ಭಾರತೀಯ ಯುದ್ಧನೌಕೆಗಳನ್ನು ಅವರು ಹತ್ತಿರದಿಂದ ಗಮನಿಸಿದ್ದಾರೆ. ಯುದ್ಧನೌಕೆಯ ಮೂಲಕ ಆಳ ಸಮುದ್ರಕ್ಕೆ ತೆರಳಿದ ಅವರು ರಕ್ಷಣಾ ಸಾಮರ್ಥ್ಯಗಳ ಪರಿಶೀಲನೆ ನಡೆಸಿದ್ದಾರೆ. ನೌಕಾಪಡೆಯ ಐ ಎನ್ಎಸ್ ವಾಗ್ಶೀರ್ ಜಲಾಂರ್ತಗಾಮಿ ನೌಕೆಯಲ್ಲಿ ದ್ರೌಪದಿ ಮುರ್ಮು ಅವರು ಸಂಚಾರ ಮಾಡಿದ್ದು, ಯುದ್ಧ ನೌಕೆಯ ಬಗ್ಗೆ ಅವರು ಅಧಿಕಾರಿಗಳಿಂದ ಮಾಹಿತಿಪಡೆದಿದ್ದಾರೆ.
ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳು ವೈದ್ಯ ಅವರು ಸ್ವಾಗತಿಸಿದ್ದಾರೆ. ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಎಡಿಜಿಪಿ ಹಿತೇಂದ್ರ, ಐಜಿಪಿ ಅಮಿತ್ ಸಿಂಗ್, ಎಸ್ಪಿ ದೀಪನ್ ಎಂ ಎನ್ ಹಾಗೂ ಚೀಫ್ ಆಫ್ ದ ನೇವಲ್ ಸ್ಟಾಫ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಟಿ, ಕಾರವಾರ ನೆವಲ್ ಬೇಸ್ ನ ಫ್ಲಾಗ್ ಆಫೀಸರ್ ಕಮಾಂಡಿoಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಸಹ ದ್ರೌಪದಿ ಮುರ್ಮು ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.