ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಫೆಬ್ರವರಿ 22ರ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ವಿವಿಧ ಊರುಗಳಿಗೆ ಜಂಟಿ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.
ಈ ಪ್ರವಾಸದ ವೇಳೆ ಅವರು ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ಮೂಲಕ ಅವರಿಬ್ಬರು ಒಟ್ಟಿಗೆ ಪ್ರಯಾಣಿಸಲಿದ್ದು, ಕಾರವಾರ ಮತ್ತು ಅಂಕೋಲಾದಲ್ಲಿ ನಡೆಯುವಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂಕೋಲಾದಲ್ಲಿ ಗಂಗಾವಳಿ ನೂತನ ಸೇತುವೆಯನ್ನು ಅವರು ಉದ್ಘಾಟಿಸಲಿದ್ದಾರೆ. ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನೂತನ ಸೇತುವೆಯನ್ನು ಮಂಜಗುಣಿಯಲ್ಲಿ ಉದ್ಘಾಟಿಸಲಿದ್ದಾರೆ. ಕಾರವಾರದಲ್ಲಿ 450 ಹಾಸಿಗೆಗಳ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 450 ಹಾಸಿಗೆಗಳ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರವಾರದಲ್ಲಿಯೇ ಕುಳಿತು ಆ ಇಬ್ಬರು ನಾಯಕರು ಆನ್ಲೈನ್ ಮೂಲಕ ಯಲ್ಲಾಪುರ ತಾಲೂಕಿನ ಖಾನಾಪುರ-ತಾಳಗುಪ್ಪಾ ರಾಜ್ಯ ಹೆದ್ದಾರಿಯ ನೂತನ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ನಾಯಕರು, 11 ಗಂಟೆಗೆ ಹುಬ್ಬಳ್ಳಿ ತಲುಪಲಿದ್ದಾರೆ.
ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11:50ಕ್ಕೆ ಅಂಕೋಲಾದ ಮಂಜಗುಣಿಗೆ ಆಗಮಿಸಲಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿ 12:45ಕ್ಕೆ ಕಾರವಾರದ ಮಾಲಾದೇವಿ ಕ್ರೀಡಾಂಗಣದ ಹೆಲಿಪ್ಯಾಡ್ಗೆ ಬಂದಿಳಿಯಲಿದ್ದಾರೆ. ಸಂಜೆ 4 ಗಂಟೆಗೆ ಕಾರವಾರದಿಂದ ನಿರ್ಗಮಿಸಿ, ಹುಬ್ಬಳ್ಳಿ ಮುಖಾಂತರ ಸಂಜೆ ವೇಳೆಗೆ ಮರಳಿ ಬೆಂಗಳೂರು ತಲುಪಲಿದ್ದಾರೆ.