`ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಬೇಕು’ ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಪಾದಯಾತ್ರೆ ನಡೆಸಿದ್ದು, ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಸಜ್ಜಿತ ಆಸ್ಪತ್ರೆ ಘೋಷಣೆ ಮಾಡಿದರೂ ಅನಂತಮೂರ್ತಿ ಹೆಗಡೆ ಅವರು ಸಮಾಧಾನವಾಗಿಲ್ಲ. `ಸಿದ್ದರಾಮಯ್ಯ ಅವರು ಘೋಷಿಸಿದ 100 ಕೋಟಿ ರೂ ಹಣ ಯಾವುದಕ್ಕೂ ಸಾಲಲ್ಲ’ ಎಂದು ಅನಂತಮೂರ್ತಿ ಹೆಗಡೆ ಅವರು ಹೇಳಿದ್ದಾರೆ.
`ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ 10-20ಕೋಟಿ ಅಗತ್ಯವಿರುವ ದಿನದಲ್ಲಿ ಸುಸಜ್ಜಿತ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 100ಕೋಟಿ ರೂ ಕೊಟ್ಟಿರುವುದು ಸರಿಯಾದ ಲೆಕ್ಕ ಅಲ್ಲ. ಆಸ್ಪತ್ರೆ ನಿರ್ಮಾಣಕ್ಕೆ 400 ಕೋಟಿ ರೂ ಅಗತ್ಯವಿದೆ’ ಎಂದು ಅನಂತಮೂರ್ತಿ ಹೆಗಡೆ ಅವರು ಲೆಕ್ಕಾಚಾರ ಹಾಕಿದ್ದಾರೆ. 100 ಕೋಟಿ ರೂ ಘೋಷಣೆ ಮಾಡಿದ್ದು, ಜನರ ಕಣ್ಣೋರಿಸುವ ತಂತ್ರವಾಗಿದೆ. ಈ ನೂರು ಕೋಟಿ ರೂ ಹಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲು ಸಾಧ್ಯವೇ ಇಲ್ಲ’ ಎಂದವರು ಹೇಳಿದ್ದಾರೆ.
`ಘೋಷಿಸಿದ ಆಸ್ಪತ್ರೆಗೆ ಎಷ್ಟು ಹಾಸಿಗೆ ಬರಲಿದೆ? ಕಾರ್ಡಿಯಾಲಜಿ ಅಥವಾ ನೆಫ್ರಾಲಜಿ ವಿಭಾಗಗಳಿವೆಯೇ? ಎಂಬ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಇದು ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಮಾಡುತ್ತಿರುವ ಗಿಮಿಕ್ ಮಾತ್ರ’ ಎಂದವರು ಹೇಳಿದ್ದಾರೆ. `ಈ ಬಜೆಟಿನಲ್ಲಿ ಉತ್ತರಕನ್ನಡ ಜಿಲ್ಲೆಗೆ ಯಾವುದೇ ವಿಶೇಷ ಅನುದಾನ ಇಲ್ಲ. ರೈತ ವಲಯಕ್ಕೂ ಯಾವುದೇ ಅನುಕೂಲ ಮಾಡಿಕೊಡುವಂಥ ಕೊಡುಗೆ ಇಲ್ಲ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿ ಜಿಲ್ಲೆಗಳು ಸೇರಿ ಅಡಿಕೆ ಬೆಳೆಗಾರರು ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗೆಟ್ಟಿದರೂ ಆ ಬಗ್ಗೆ ಪ್ರತ್ಯೇಕ ಅನುದಾನ ನೀಡಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದ್ದಾರೆ.
`ಅಡಿಕೆಯ ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ, ಹಾಗೂ ಕೋಳೆ ರೋಗಗಳ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ಎಂದಷ್ಟೇ ಬಜೆಟಿನಲ್ಲಿ ಹೇಳಲಾಗಿದ್ದು, ತೆಂಗಿನ ಬೆಳೆಗೆ ಮಾರಕವಾಗಿರುವ ಕಪ್ಪು ತಲೆ ಹೂಳು ಮತ್ತು ಬಿಳಿ ನೊಣಗಳ ಹಾವಳಿಯನ್ನು ತಡೆಗಟ್ಟಲು ಎಲ್ಲವೂ ಸೇರಿ 10 ಕೋಟಿ ವೆಚ್ಚದ ಸಮುದಾಯ ಆಧಾರಿತ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಆದರೆ, ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದೇ ಅಥವಾ ಪ್ರತ್ಯೇಕ ಅನುದಾನ ಮೀಸಲಿಡುವುದು, ಅಥವಾ ಎಲೆಚುಕ್ಕೆ ರೋಗಕ್ಕೆ ಔಷಧ ಸಂಶೋಧನೆಗೆ ಅನುದಾನವಿಲ್ಲ ಎನ್ನುವುದು ಸರಿಯಲ್ಲ’ ಎಂದಿದ್ದಾರೆ.