`ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಲ್ಲಿಯೇ ಔಷಧಿ ವಿತರಿಸಬೇಕು. ಹೊರಗಡೆಯ ಔಷಧಿ ಮಳಿಗೆಗೆ ಚೀಟಿ ಕೊಡುವ ವೈದ್ಯರ ವಿರುದ್ಧ ಕಠಿಣ ಕ್ರಮ ಅನಿವಾರ್ಯ’ ಎಂದು ಉತ್ತರ ಕನ್ನಡ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಎಚ್ಚರಿಸಿದ್ದಾರೆ.
`ಆಸ್ಪತ್ರೆಯಲ್ಲಿ ಔಷಧಗಳ ಕೊರತೆ ಇದ್ದರೆ ಆರೋಗ್ಯ ರಕ್ಷಾ ಸಮಿತಿಯ ಮೂಲಕ ಅಗತ್ಯವಿರುವಷ್ಟು ಔಷಧಗಳನ್ನು ಖರೀದಿಸಬೇಕು. ಅದನ್ನು ರೋಗಿಗಳಿಗೆ ಉಚಿತವಾಗಿ ವಿತರಣೆ ಮಾಡಬೇಕು’ ಎಂದವರು ಸೂಚಿಸಿದ್ದಾರೆ. `ಯಾವುದೇ ಸರಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುವ ಔಷಧÀಗಳ ವಿತರಣೆಯಲ್ಲಿ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕು’ ಎಂದು ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. `ಮಕ್ಕಳ ಕೊರತೆಯಿಂದ ಈಗಾಗಲೇ ಮುಚ್ಚಿರುವ ಸರಕಾರಿ ಶಾಲೆಗಳನ್ನು ಸರ್ವೇ ಮಾಡಿಸಬೇಕು. ನಂತರ ಅವುಗಳನ್ನು ಸ್ಥಳೀಯ ಗ್ರಾಮ ಪಂಚಾಯತ್ಗಳಿಗೆ ಹಸ್ತಾಂತರಿಸಬೇಕು. ಮುಚ್ಚಿದ ಶಾಲೆಗಳ ಜಾಗ ಅತಿಕ್ರಮಣವಾದಲ್ಲಿ ಸಂಬAಧಪಟ್ಟ ಪಂಚಾಯತ್ನ ಪಿಡಿಓ ಮತ್ತು ತಾ ಪಂ ಕಾರ್ಯನಿರ್ವಹಣಾಧಿಕಾರಿಗಳನ್ನು ಜವಾಬ್ದಾರನ್ನಾಗಿ ಮಾಡಲಾಗುತ್ತದೆ’ ಎಂದು ಎಚ್ಚರಿಸಿದರು. `ಶಿಥಿಲಾವಸ್ಥೆಯಲ್ಲಿರುವ ಶಾಲೆಗಳನ್ನು ನಿಯಮಾನುಸಾರ ತೆರವುಗಳಿಸುವಂತೆ ಹಾಗೂ ಶಾಲಾ ಆವರಣದಲ್ಲಿನ ಅಪಾಯಕಾರಿ ಮರ, ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕು. ಮಕ್ಕಳಿಗೆ ಎಲ್ಲಾ ರೀತಿಯ ಸುರಕ್ಷತೆ ಇರುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.
`ಹಾಸ್ಟೆಲ್ ಪ್ರವೇಶ ಕೋರುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು. ಪ್ರವೇಶ ಪ್ರಕ್ರಿಯೆಯನ್ನು ಅದಷ್ಟು ಮುಂಚಿತವಾಗಿ ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು’ ಎಂದು ಸಚಿವರು ಸೂಚಿಸಿದರು. `ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಮುಂಬರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರ ಸಮರ್ಪಕವಾಗಿ ನಡೆಯಬೇಕು. ಜಿಲ್ಲೆಗೆ ಬಂದಿರುವ ಹೊಸ ಬಸ್ ಗಳನ್ನು ಅಗತ್ಯವಿರುವೆಡೆಗಳಲ್ಲಿ ಕಾರ್ಯಚರಣೆಗೆ ನಿಯೋಜಿಸಬೇಕು. ಕಾರವಾರ- ಬೆಂಗಳೂರು ನಡುವೆ ಬಸ್ ಸ್ಥಗಿತಗೊಳಿಸುವ ಬಸ್ ಸಂಚಾರವನ್ನು ಮತ್ತೆ ಶುರು ಮಾಡಬೇಕು’ ಎಂದು ಸೂಚಿಸಿದರು. ಸಾರಿಗೆ ಬಸ್ಗಳ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. `ಜಿಲ್ಲೆಗೆ ಇದುವರೆಗೆ 104 ಹೊಸ ಬಸ್ ಕೊಟ್ಟಿದ್ದೇವೆ. ಪ್ರಸ್ತುತ ಇನ್ನೂ 20 ಹೊಸ ಬಸ್ಗಳು ಬರುತ್ತವೆ. ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸಿ’ ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಿದರು. `ಎಲ್ಲ ಕಡೆ ಗುಜರಿ ಬಸ್ಗಳು ಓಡಾಡುತ್ತಿವೆ. ಬಸ್ಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಕಾರವಾರ, ಅಂಕೋಲಾ ಬಸ್ ಘಟಕಗಳು ದುರ್ಬಲವಾಗಿವೆ’ ಎಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ ಸೈಲ್ ಆರೋಪಿಸಿದರು.