`ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ಮಳೆ ಮಾಪನ ಯಂತ್ರಗಳು ಹಾಳಾಗಿದ್ದು, ಅದರ ದುರಸ್ಥಿಗೆ ಕ್ರಮ ಜರುಗಿಸಬೇಕು. ಹೊಸ ಯಂತ್ರ ಅಳವಡಿಕೆ ಆಗುವವರೆಗೆ ಬೆಳೆ ವಿಮೆ ಪಾವತಿಗೆ ಈ ಹಿಂದಿನoತೆ ಗ್ರಾಮ ಪಂಚಾಯತ್ಗಳಲ್ಲಿ ಅಳವಡಿಸಿರುವ ಮ್ಯಾನ್ಯುಯಲ್ ಗೇಜ್ ಯಂತ್ರಗಳ ಮಾಪನವನ್ನು ವಿಮಾ ಪರಿಹಾರದ ಮೊತ್ತ ಪಾವತಿಗೆ ಪರಿಗಣಿಸಬೇಕು’ ಎಂದು ಉತ್ತರ ಕನ್ನಡ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ತೋಟಗಾರಿಕಾ ಇಲಾಖೆ ಮೂಲಕ ಇಲಾಖೆಯ ಕೇಂದ್ರ ಕಚೇರಿಗೆ ಪತ್ರ ಬರೆಯುವಂತೆಯೂ ಅವರು ತಿಳಿಸಿದ್ದಾರೆ.
ಶುಕ್ರವಾರ ಸಭೆ ನಡೆಸಿದ ಅವರು `ಉತ್ತರ ಕನ್ನಡ ಜಿಲ್ಲೆಯ ಯಾವ ಭಾಗದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದ ರೀತಿ ಕ್ರಮ ಜರುಗಿಸಿ’ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯೂ ಆಗಿರುವ ಉತ್ತರ ಕನ್ನಡ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. `ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಮುಂಚಿತವಾಗಿ ಸಿದ್ದಪಡಿಸಿಕೊಳ್ಳಬೇಕು. ಆ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಸೇರಿದಂತೆ ಪರ್ಯಾಯ ನೀರಿನ ವ್ಯವಸ್ಥೆಗೆ ಅಗತ್ಯ ಸಿದ್ದತೆಗಳನ್ನು ನಡೆಸಬೇಕು. ಹೊಸ ಬೋರ್ವೆಲ್ ಕೊರೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ವೈಜ್ಞಾನಿಕವಾಗಿ ಅಂತರ್ಜಲ ಮರುಪೂರಣ ವ್ಯವಸ್ಥೆ ಅವಡಿಸಿಕೊಂಡಲ್ಲಿ ಮಾತ್ರ ಅನುಮತಿಯನ್ನು ನೀಡಬೇಕು’ ಎಂದು ನಿರ್ದೇಶನ ನೀಡಿದರು.
`ಮುಂಡಗೋಡದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಲ್ಲಿ ಪರೀಕ್ಷೆ ಬರೆಯಲು ಅಗತ್ಯವಿರುವ ಎಲ್ಲಾ ರೀತಿಯ ನೆರವು ಮತ್ತು ಪ್ರೋತ್ಸಾಹ ನೀಡುವ ಮೂಲಕ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಅವರು ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಿ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. `ಗ್ಯಾಸ್ ಸಿಲೆಂಡರ್ ಸಮಸ್ಯೆಯಿಂದ ಜಿಲ್ಲೆಯಲ್ಲಿ ಬಿಸಿಯೂಟ ಯೋಜನೆಗೆ ಯಾವುದೇ ಸಮಸ್ಯೆಯಾಗಿಲ್ಲ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. `ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರಗಳು ಮತ್ತು ಅಂಗನವಾಡಿಗಳ ಕಟ್ಟಡ ನಿರ್ಮಾಣದ ಬಾಕಿ ಇರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಜಲ ಜೀವನ್ ಮಿಷನ್ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಅಂತರ್ಜಲ ವೃಧ್ದಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮತ್ತು ಕೃಷಿ ಇಲಾಖೆವತಿಯಿಂದ ನಿರ್ಮಿಸಿರುವ ನೀರು ಸಂಗ್ರಹ ಕಾಮಗಾರಿಗಳ ಸ್ಥಳಗಳನ್ನು ಮ್ಯಾಪಿಂಗ್ ಮಾಡುವಂತೆ ನಿರ್ದೇಶಿಸಿದರು. ಪ್ರಸಕ್ತ ಸಾಲಿನಲ್ಲಿ ಜಿ.ಪಂ. ಅಧೀನದ ಎಲ್ಲಾ ಇಲಾಖೆಗಳು ತಮಗೆ ನೀಡಿದ ಅನುದಾನವನ್ನು ಸಮರ್ಪಕವಾಗಿ ಮತ್ತು ಸಂಪೂರ್ಣವಾಗಿ ಬಳಕೆ ಮಾಡಿರುವ ಬಗ್ಗೆ ಮತ್ತು ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪಂಚಾಯತ್ ಎಲ್ಲಾ ಶಾಖಾ ಮುಖ್ಯಸ್ಥರು ಮತ್ತು ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಹಾಜರಿದ್ದರು.