ಉತ್ತರ ಕನ್ನಡ ಜಿಲ್ಲೆಯ ಜನರ ವಿರೋಧಕ್ಕೆ ಕಾರಣವಾದ ನದಿ ತಿರುವು ಯೋಜನೆ ವಿರುದ್ಧ ಜಿಲ್ಲಾ ಪಂಚಾಯತ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದು, ಸಚಿವ ಮಂಕಾಳು ವೈದ್ಯ ಅವರು ವಿರೋಧದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.
ಕಾರವಾರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬೇಡ್ತಿ- ವರದಾ, ಅಘನಾಶಿನಿ- ವೇದಾವತಿ ನದಿ ಜೋಡಣೆ ಯೋಜನೆ ಕುರಿತು ವಿಷಯ ಬಂದಿತು. ಈ ಯೋಜನೆಯನ್ನು ವಿರೋಧಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಒತ್ತಾಯಿಸಿದರು. ಇದಕ್ಕೆ ಮರು ಮಾತನಾಡದೇ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಸಮ್ಮತಿ ಸೂಚಿಸಿದರು. ಆ ಮೂಲಕ ನದಿ ಜೋಡಣೆಯ ವಿರೋಧದ ಪ್ರಸ್ತಾವನೆಗೆ ತಮ್ಮ ಒಪ್ಪಿಗೆ ಸೂಚಿಸಿ ಅನುಮೋದನೆ ನೀಡಿದರು.
`ಬೇಸಿಗೆಯಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನೀರಿನ ಕೊರತೆಯಾಗದÀಂತೆ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಯಮಿತವಾಗಿ ಲ್ಯಾಬ್ ಗಳಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ನೀರಿನ ಮೂಲ ಇರುವ ಕಡೆಗಳಲ್ಲಿ ಮಾತ್ರ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು’ ಎನ್ನುವ ಬಗ್ಗೆ ಸಭೆಯಲ್ಲಿ ಸಚಿವರು ಸೂಚಿಸಿದರು.
ಜಲಪಾತಗಳ ವೀಕ್ಷಣೆಗೆ ಆಗಮಿಸುವವರ ಜೀವಹಾನಿಯ ಬಗ್ಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ವಿಷಯ ಪ್ರಸ್ತಾಪಿಸಿದರು. `ಈ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳು, ಮುನ್ನೆಚ್ಚರಿಕ ಸೂಚನಾ ಫಲಕಗಳು ಮತ್ತು ಹೋಂ ಗಾರ್ಡ್ಗಳನ್ನು ನಿಯೋಜಿಸಬೇಕು’ ಎಂದು ಆಗ್ರಹಿಸಿದರು. `ಹಾವೇರಿ-ಶಿರಸಿ ರಸ್ತೆ ಕಾಮಗಾರಿಯಿಂದ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಧೂಳಿನಿಂದ ನರಳುತ್ತಿದ್ದಾರೆ. ಈ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದ್ದು, ಪ್ರಸ್ತುತ ಕಿತ್ತು ಹಾಕಿರುವ ರಸ್ತೆಯನ್ನು ಆದ್ಯತೆಯಲ್ಲಿ ನಿರ್ಮಾಣ ಮಾಡಬೇಕು’ ಎಂದು ಅವರು ಸಭೆಯಲ್ಲಿ ಆಗ್ರಹಿಸಿದರು.
ಮಳೆ ಮಾಪನ ಯಂತ್ರಗಳ ದುರಸ್ತಿ ಮತ್ತು ಕಾರ್ಯನಿರ್ವಹಣೆ, ಆಟೋಗಳಿಗೆ ಪರ್ಮಿಟ್ ನೀಡುವ ಬಗ್ಗೆ, ಬೆಳೆ ವಿಮೆ ಪಾವತಿ ಬಗ್ಗೆ, ಪ್ರಾಕೃತಿಕ ವಿಕೋಪ ತಡೆ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸುವ ಬಗ್ಗೆ, ಅತಿಕ್ರಮಣ ಜಮೀನುಗಳ ಜಿ ಪಿ ಎಸ್ ಸರ್ವೇ ಕಾರ್ಯದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಮಳೆಗಾಲದಲ್ಲಿ ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಳಾಗುವುದನ್ನು ತಪ್ಪಿಸಲು 24 ಗಂಟೆಯೊಳಗೆ ಟ್ರಾನ್ಸ್ ಫಾರ್ಮರ್ ಮತ್ತು ವಿದ್ಯುತ್ ಕಂಬಗಳ ಜೋಡಣೆ ಮಾಡುವ ರೀತಿಯಲ್ಲಿ ಎಲ್ಲಾ ಅಗತ್ಯ ಸಿದ್ದತೆ, ಉಪಕರಣಗಳ ಲಭ್ಯತೆ ಮತ್ತು ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸಚಿವರು ಸೂಚಿಸಿದರು. ಹಳೆಯದಾದ ಮತ್ತು ಅಪಾಯಕಾರಿಯಾಗಿರುವ ವಿದ್ಯುತ್ ತಂತಿಗಳ ತೆರವು ಮತ್ತು ಬದಲಾವಣೆ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಇತರರಿದ್ದರು.