ರಾಜ್ಯ ಸರ್ಕಾರ ನೀಡುವ `ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ಶಿರಸಿಯ ಸ್ಕೋಡ್ವೆಸ್ ಸಂಸ್ಥೆ ಭಾಜನವಾಗಿದೆ. ಮಹಿಳಾ ಮತ್ತು ಮಕ್ಕಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆಗಾಗಿ ಈ ಪ್ರಶಸ್ತಿ ಸಿಕ್ಕಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಕೊಡ್ವೆಸ್ ಸಂಸ್ಥೆಯ ಅಧ್ಯಕ್ಷರು ಆಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಿ ಚಿ ಬೋರಲಿಂಗಯ್ಯ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಪ್ರಶಸ್ತಿ ವಿತರಿಸಿ ನಂತರ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಕೊಡ್ವೆಸ್ ಸಂಸ್ಥೆಯ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು. `ಮಹಿಳಾ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಸ್ಕೊಡ್ವೆಸ್ ಸಂಸ್ಥೆ ಇತರ ಸಂಸ್ಥೆಗಳಿಗೂ ಮಾದರಿ’ ಎಂದವರು ಹೇಳಿದರು. `ಕಳೆದ 20 ವರ್ಷಗಳಿಂದ ಮಹಿಳೆಯರು, ಮಕ್ಕಳು, ವಿಶೇಷ ಚೇತನರು, ವೃದ್ಧರ ಬಲವರ್ಧನೆಗೆ ಶ್ರಮಿಸುತ್ತಿರುವ ಸಂಸ್ಥೆಗೆ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸುವುದರ ಮೂಲಕ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಪ್ರೋತ್ಸಾಹ ಸಿಕ್ಕಿದೆ’ ಎಂದು ಹಿ ಚಿ ಬೋರಲಿಂಗಯ್ಯ ಅವರು ಅಭಿಪ್ರಾಯಪಟ್ಟರು. ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಸ್ಕೊಡ್ವೆಸ್ ಸಂಸ್ಥೆಗೆ ರಾಜ್ಯ ಸರ್ಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಬಂದಿರುವುದಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಭಿನಂದನೆ ಸಲ್ಲಿಸಿದರು.
`ಸ್ಕೊಡ್ವೆಸ್ ಸಂಸ್ಥೆ ಸ್ಥಾಪಿತವಾಗಿರುವುದೇ ಮಹಿಳೆಯರ ಮತ್ತು ಮಕ್ಕಳ ಸಬಲೀಕರಣಕ್ಕಾಗಿ. ನಮ್ಮ ಸೇವೆಯನ್ನು ಪರಿಗಣಿಸಿ ಸರ್ಕಾರ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ನೀಡಿರುವುದಕ್ಕೆ ಸಂತಸವಾಗಿದೆ’ ಎಂದು ಸ್ಕೊಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಅನಿಸಿಕೆವ್ಯಕ್ತಪಡಿಸಿದರು. `ಮಹಿಳೆಯರ ಮತ್ತು ಮಕ್ಕಳ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸಬಲೀಕರಣ, ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಸರ್ಕಾರ ನಮ್ಮ ಸಾಧನೆಯನ್ನು ಪರಿಗಣಿಸಿರುವುದು ಇಷ್ಟು ವರ್ಷಗಳ ಶ್ರಮವನ್ನು ಗೌರವಿಸಿದ ಹಾಗಾಗಿದೆ’ ಎಂದು ಸ್ಕೊಡ್ವೆಸ್ ಮಹಿಳಾ ಸೌಹಾರ್ದ ಸಹಕಾರಿ ಅಧ್ಯಕ್ಷೆ ಸರಸ್ವತಿ ಎನ್ ರವಿ ಅವರು ಪ್ರತಿಕ್ರಿಯಿಸಿದರು.