ಯಲ್ಲಾಪುರದ ಮದನೂರು, ಖಂಡ್ರನಕೊಪ್ಪ, ಮಾದೇವಕೊಪ್ಪ ಭಾಗಕ್ಕೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮದನೂರು ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ವಿಠ್ಠು ಶಳಕೆ ಅವರು ಆಗ್ರಹಿಸಿದ್ದಾರೆ.
ಪ್ರತಿ ದಿನ 50ಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸರ್ಕಾರಿ ಬಸ್ಸುಗಳನ್ನು ಅವಲಂಭಿಸಿದ್ದಾರೆ. ಈ ಭಾಗದ ಮಕ್ಕಳು ಯಲ್ಲಾಪುರ ಹಾಗೂ ಕಿರವತ್ತಿಗೆ ವಿದ್ಯಾರ್ಜನೆಗೆ ಹೋಗುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ಸು ಸಿಗದ ಕಾರಣ ಅವರ ಶೈಕ್ಷಣಿಕ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಭಾಗದಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದು, ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ದೊರತರೆ ಉನ್ನತ ಸಾಧನೆ ಸಾಧ್ಯವಾಗುತ್ತದೆ. ಈ ಹಿನ್ನಲೆ ವಿದ್ಯಾರ್ಥಿಗಳಿಗಾದ ಅನಾನುಕೂಲ ಸರಿಪಡಿಸಬೇಕು ಎಂದವರು ಒತ್ತಾಯಿಸಿದ್ದಾರೆ.
ಕಳೆದ ವರ್ಷ ಗ್ರಾಮ ಸಭೆಯಲ್ಲಿ ಸಹ ಈ ವಿಷಯ ಪ್ರಸ್ತಾಪವಾಗಿದ್ದು, ಅದೇ ಅವಧಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ವರ್ಷ ಕಳೆದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಮತ್ತೊಮ್ಮೆ ನೆನಪಿಸುವುದಕ್ಕಾಗಿ ಬಸ್ ಸಮಸ್ಯೆ ಬಗ್ಗೆ ಗಮನಸೆಳೆಯುತ್ತಿದ್ದು, ಕೂಡಲೇ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅನೇಕ ವಿದ್ಯಾರ್ಥಿಗಳು ಕಾಡು ದಾರಿಯಲ್ಲಿ 8ಕಿಮೀ ನಡೆದು ಬಸ್ ಹತ್ತಬೇಕಿದೆ. ಹುಬ್ಬಳ್ಳಿ-ಯಲ್ಲಾಪುರ ಮಾರ್ಗವಾಗಿ ಸಂಚರಿಸುವ ಬಸ್ ತುಂಬ ಜನರಿರುವ ಕಾರಣ ಕೆಲ ಬಸ್ಸುಗಳು ಗ್ರಾಮೀಣ ಭಾಗದಲ್ಲಿ ನಿಲುಗಡೆ ಆಗುತ್ತಿಲ್ಲ ಎಂಬ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. ಸಮಸ್ಯೆಗೆ ಸ್ಪಂದಿಸದೇ ಇದ್ದರೆ ಹೋರಾಟ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.