`ಬಿಜೆಪಿ ಸರ್ಕಾರದ ರಚನೆಗಾಗಿ 17 ಶಾಸಕರನ್ನು ಹಣ ಕೊಟ್ಟು ಖರೀದಿಸಲಾಗಿತ್ತು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದು, `ತಾನೂ ಹಣಪಡೆದಿಲ್ಲ’ ಎಂದು ಯಲ್ಲಾಪುರ-ಮುಂಡಗೋಡು-ಬನವಾಸಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಪ್ರಮಾಣ ಮಾಡಿದ್ದಾರೆ. ಜೊತೆಗೆ `ಕೆ ಎಸ್ ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ದಾಖಲಿಸಬೇಕು’ ಎಂದು ಸಹ ಶಿವರಾಮ ಹೆಬ್ಬಾರ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಶಿವರಾಮ ಹೆಬ್ಬಾರ್ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. `ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಕೆ ಎಸ್ ಈಶ್ವರಪ್ಪ ಅವರು ಹೆಣಗಾಡುತ್ತಿದ್ದಾರೆ. ಅದಕ್ಕಾಗಿಯೇ ಅವರು ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ’ ಎಂದಿದ್ದಾರೆ. `ಕೆ ಎಸ್ ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ ತಲುಪಿರುವುದು ಅವರ ಹೇಳಿಕೆಗಳಿಂದ ಸ್ಪಷ್ಟವಾಗುತ್ತದೆ. ಈಶ್ವರಪ್ಪ ಅವರು ಮಾನಸಿಕ ಸಿಮೀತವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದರಿoದ ಅವರನ್ನು ಕೂಡಲೇ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು’ ಎಂದಿದ್ದಾರೆ.
`ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು 17 ಕಾಂಗ್ರೆಸ್ ಶಾಸಕರನ್ನು ಹಣ ನೀಡಿ ಖರೀದಿಸಲಾಗಿತ್ತು ಎಂಬ ಹೇಳಿಕೆ ಆಧಾರರಹಿತ. ಒಂದು ವೇಳೆ ಅವರ ಹೇಳಿಕೆಯಲ್ಲಿ ಸತ್ಯವಿದ್ದರೆ ಹಣ ಕೊಟ್ಟವರು ಯಾರು? ಪಡೆದವರು ಯಾರು? ವ್ಯವಹಾರ ನಡೆದ ಸ್ಥಳ ಯಾವುದು? ಎಂದು ದಾಖಲೆ ಬಿಡುಗಡೆ ಮಾಡಬೇಕು’ ಎಂದು ಸವಾಲು ಹಾಕಿದರು. `ಇದನ್ನು ಸಾಭೀತುಪಡಿಸಲು ಸಾಧ್ಯವಾಗದೇ ಇದ್ದರೆ ಕೆ ಎಸ್ ಈಶ್ವರಪ್ಪ ಅವರಿಗೆ ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕು ಉಳಿಯುವುದಿಲ್ಲ’ ಎಂದರು.
`ಈ 17 ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ರಾಜಕೀಯ ತ್ಯಾಗ ಮಾಡಿದ ಪರಿಣಾಮವೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಅದರ ಫಲಾನುಭವಿಯಾಗಿ ಸಚಿವ ಸ್ಥಾನವನ್ನು ಅನುಭವಿಸಿದವರಲ್ಲಿ ಈಶ್ವರಪ್ಪ ಕೂಡ ಒಬ್ಬರು’ ಎಂದು ಶಿವರಾಮ ಹೆಬ್ಬಾರ್ ಅವರು ನೆನಪಿಸಿದರು. `ತಮ್ಮ ಸಚಿವ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ಬೆಳಗಾವಿಯ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದ ಸಂದರ್ಭದಲ್ಲಿ ಅವರ ವಿರುದ್ಧ ವ್ಯಕ್ತವಾಗಿದ್ದ ಜನಾಕ್ರೋಶವನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ’ ಎಂದು ಹೇಳಿದರು.