ಚೀನಾದಲ್ಲಿ ನಡೆದ ಅಥ್ಲೆಟಿಕ್ ಚಾಂಪಿಯನ್ ಶಿಫ್’ನಲ್ಲಿ ಭಾಗವಹಿಸಿದ ಹಳಿಯಾಳದ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರು 5 ಹಾಗೂ 10 ಸಾವಿರ ಮೀಟರ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರ ಸಾಧನೆ ಗಮನಿಸಿ ಜಿಲ್ಲಾಡಳಿತ ಅವರನ್ನು ಗೌರವಿಸಿದೆ.
`ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಲಿ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಹೇಳಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕ್ರೀಡಾಪಟು ಶಿವಾಜಿ ಅವರಿಗೆ ಅವರ ಸಾಧನೆಯನ್ನು ಅಭಿನಂದಿಸಿ ಜಿಲ್ಲಾಡಳಿತದ ಮೂಲಕ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದು, `ಹಳಿಯಾಳ ತಾಲೂಕಿನ ಸಣ್ಣ ಪ್ರದೇಶದಿಂದ ಬಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ರೀತಿಯ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಶಿವಾಜಿ ಅವರು ಜಿಲ್ಲೆಯನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ’ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಮಾತನಾಡಿ `ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಸಾಧನೆ ಮಾಡುವಂತ ಪ್ರಾಕೃತಿಕ ವಾತಾವರಣವಿದ್ದು, ಕಾರವಾರದ ಜಿಲ್ಲಾ ಕ್ರೀಡಾಂಗಣವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಪೋಷಕರು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೇ ಕ್ರೀಡೆ ಮತ್ತು ಸಾಂಸ್ಕೃತಿಕ ರಂಗದಲ್ಲೂ ಕೂಡಾ ತೊಡಗಿಕೊಳ್ಳಬೇಕು’ ಎಂದರು. ಜಿಲ್ಲಾಡಳಿತ ಅಭಿನಂದನೆ ಸ್ವೀಕರಿಸಿ ಮಾತನಾಡಿದ `ಕ್ರೀಡಾಪಟು ಶಿವಾಜಿ ಅವರು ಉತ್ತರ ಕನ್ನಡ ಜಿಲ್ಲೆಯ ಮಕ್ಕಳಿಗೆ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಪ್ರತಿಭೆ ಇದ್ದು, ಅವರಿಗೆ ಅಭ್ಯಾಸ ಮಾಡಲು ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸುಸಜ್ಜಿತ ಸೌಲಭ್ಯಗಳನ್ನು ಒದಗಿಸಬೇಕು. ಸತತ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ತಾಳ್ಮೆಯಿಂದ ಸಾಧನೆಗಳನ್ನು ಮಾಡಲು ಸಾಧ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿಯನ್ನು ಹೊಂದಿದ್ದು, ಜಿಲ್ಲೆಗೆ ಮತ್ತು ದೇಶಕ್ಕಾಗಿ ಇನ್ನೂ ಉತ್ತಮ ಸಾಧನೆ ಮಾಡುತ್ತೇನೆ’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು. ಆರಂಭಿಕ ಹಂತದಲ್ಲಿ ಶಿವಾಜಿ ಅವರಲ್ಲಿದ್ದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಕೋಚ್ ಪ್ರಕಾಶ್ ಅವರಿಗೆ ಅಭಿನಂದಿಸಲಾಯಿತು. ಕಾರವಾರದ ರೋಟರಿ ಸೀ ಸೈಡ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಶಿವಾಜಿ ಅವರನ್ನು ಅಭಿನಂದಿಸಿ, ನಗದು ಬಹುಮಾನ ನೀಡಲಾಯಿತು.