ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಆಗ್ರಹಿಸಿ ಬಿಜೆಪಿಗರು ಜಿಲ್ಲಾಕೇಂದ್ರ ಕಾರವಾರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದು, ಕ್ರಮೇಣ ಆ ಪ್ರತಿಭಟನೆ ಉಗ್ರ ಸ್ವರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ಮನವಿ ಆಲಿಸಲು ಬಾರದ ಜಿಲ್ಲಾಧಿಕಾರಿಗಳ ವಿರುದ್ಧ ಬಿಜೆಪಿಗರು ಆಕ್ರೋಶವ್ಯಕ್ತಪಡಿಸಿದ್ದಾರೆ.
ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಬಿಜೆಪಿ ಧ್ವನಿ ಎತ್ತಿದ್ದು, ರಾಜ್ಯ ಸರ್ಕಾರದ ನಿರ್ಲಕ್ಷದ ವಿರುದ್ಧ ಶುಕ್ರವಾರ ಡೀಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದ ಬಿಜೆಪಿಗರಿಗೆ ಜಿಲ್ಲಾಧಿಕಾರಿಗಳ ಭೇಟಿ ಸಾಧ್ಯವಾಗಿಲ್ಲ. ಮನವಿ ಆಲಿಸಲು ಸಹ ಜಿಲ್ಲಾಧಿಕಾರಿಗಳು ಕೊಠಡಿ ಬಿಟ್ಟು ಬರಲಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಟನಾಕಾರರು ಕಚೇರಿ ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಅಲ್ಲಿಯವರೆಗೂ ಶಾಂತಿಯುತವಾಗಿಯೇ ಇದ್ದ ಆ ಪ್ರತಿಭಟನೆ ನಂತರ ಉಗ್ರ ಸ್ವರೂಪಕ್ಕೆ ತಿರುಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನ ಮಾಡಿದರು. ಇದರಿಂದ ಬಿಜೆಪಿಗರು ಇನ್ನಷ್ಟು ಸಿಟ್ಟಾಗಿ ಆಕ್ರೋಶದ ಭಾಷಣ ಮಾಡಿದರು.
`ಸಮಸ್ಯೆ ಹೊತ್ತು ಬಂದವರ ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿಗಳಿಗೆ ಸಮಯವಿಲ್ಲವೇ?’ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಶ್ನಿಸಿದರು. ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ತಾಸುಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಹೊರಭಾಗ ಗೊಂದಲದಿoದ ಕೂಡಿದ್ದು, ಜಿಲ್ಲಾಧಿಕಾರಿಗಳ ವಿರುದ್ಧವೂ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಧರಣಿ ಮುಂದುವರೆದಿರುವುದನ್ನು ಅರಿತ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ಪ್ರತಿಭಟನಾಕಾರರ ಬಳಿ ಆಗಮಿಸಿ ಅವರ ಮನವಿ ಸ್ವೀಕರಿಸಿದರು. ಅದಾದ ನಂತರ ಪ್ರತಿಭಟನಾಕಾರರು ಸಮಾಧಾನಗೊಂಡು, ಧರಣಿ ಹಿಂಪಡೆದರು.