`ಎಂಡೋಸಲ್ಫಾನ್ ಬಾಧಿತರ ಪುನರ್ವಸತಿಗೆ ಸಾಂಘಿಕ ಪ್ರಯತ್ನದ ಅವಶ್ಯಕತೆಯಿದೆ’ ಎಂದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಹೇಳಿದ್ದಾರೆ. ಕುಮಟಾದ ಮಿರ್ಜಾನ್ ಕೋಡ್ಕಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವಾರದಲ್ಲಿ ಸ್ಕೊಡ್ವೆಸ್ ಸಂಸ್ಥೆ ಮತ್ತು ಬೆಂಗಳೂರಿನ ಆಶ್ರಯ ಹಸ್ತ ಫೌಂಡೇಶನ್ ಸಹಯೋಗದಲ್ಲಿ ಅವರು ಎಂಡೋಬಾಧಿತರಿಗೆ ವೈದ್ಯಕೀಯ ಪರಿಕರಗಳನ್ನು ವಿತರಿಸಿದ್ದಾರೆ.
`ಎಂಡೋಸಲ್ಫಾನ್ ಕ್ರಿಮಿನಾಶಕದ ಬಳಕೆಯನ್ನು ನಿಷೇಧಿಸಿ 30 ವರ್ಷ ಕಳೆದರೂ ಇಂದಿಗೂ ಎಂಡೋ ಬಾಧಿತ ಪ್ರದೇಶಗಳಲ್ಲಿ ಬಹು ಅಂಗವೈಕಲ್ಯ ಮಕ್ಕಳು ಜನಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ವಿಶೇಷ ಗಮನವಹಿಸಿ ಎಂಡೋಸಲ್ಫಾನ್ ಕ್ರಿಮಿನಾಶಕ ಬಳಸಲಾದ ಪ್ರದೇಶಗಳನ್ನು ಗುರುತಿಸಿ ಇಂತಹ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ನಿಷ್ಕಿಯಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದವರು ಆಗ್ರಹಿಸಿದ್ದಾರೆ. ಹಲವಾರು ವರ್ಷಗಳಿಂದ ಎಂಡೋಸಲ್ಫಾನ್ ಬಾಧಿತರ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಸ್ಕೊಡ್ವೆಸ್ ಸಂಸ್ಥೆಯ ಶ್ರಮವನ್ನು ಅವರು ಶ್ಲಾಘಿಸಿದ್ದಾರೆ.
ಮುಖ್ಯ ಅತಿಥಿಗಳಾಗಿದ್ದ ತಾಲೂಕು ವೈದ್ಯಾಧಿಕಾರಿ ಡಾ ಆಜ್ಞಾ ನಾಯಕ ಅವರು `ಎಂಡೋ ಬಾಧಿತರ ಜೊತೆಗೆ ಅವರ ಕುಟುಂಬದ ಸಂರಕ್ಷಣೆಗೂ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅವಶ್ಯಕತೆಗಳಿದ್ದು, ಇಲಾಖೆಯಿಂದ ಲಭ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ’ ಎಂದರು. ಅಧ್ಯಕ್ಷತೆವಹಿಸಿದ್ದ ಸ್ಕೊಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಬಾಧಿತರಿಗೆ ಸರ್ಕಾರದಿಂದ ಒದಗಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು. `ಎಂಡೋ ಬಾಧಿತರ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಪುನರ್ವಸತಿ ಒದಗಿಸಬೇಕಿದ್ದು ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಮನವಿ ಮಾಡಿದರು.
ಕೋಡ್ಕಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಶ್ರೇಯಾಂಕಾ ನಾಯಕ್ ಅವರು ಮಾತನಾಡಿದರು. ಎಂಡೋಸಲ್ಫಾನ ಬಾಧಿತರು ಹಾಗೂ ಅವರ ಕುಟುಂಬದ ಸದಸ್ಯರು, ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ಕೊಡ್ವೆಸ್ ಸಂಸ್ಥೆಯ ಯೋಜನಾ ಸಂಯೋಜಕ ಸೂರ್ಯ ಗುಂಡು ಅವರು ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಯೋಜನಾ ವಿಭಾಗದ ಮುಖ್ಯಸ್ಥ ನಾರಾಯಣ ಹೆಗಡೆ ಅವರು ವಂದಿಸಿದರು. ಕೊನೆಯಲ್ಲಿ ಎರಡು ತಿಂಗಳುಗಳ ಕಾಲ ನಡೆದ ಫಿಸಿಯೋಥೆರಪಿ ಚಿಕಿತ್ಸೆ ಪಡೆದ ಎಂಡೋ ಬಾಧಿತ ಮಕ್ಕಳಿಗೆ ವೈದ್ಯಕೀಯ ಪರಿಕರಗಳನ್ನು ವಿತರಿಸಲಾಯಿತು.