ಗೋಳಿಕಟ್ಟಾ ಗ್ರಾಮದ ಬಳಿ ಅರಣ್ಯ ಅಧಿಕಾರಿಗಳು ಜೆಸಿಬಿ ನುಗ್ಗಿಸಿದ್ದು, ಇದನ್ನು ಸಹಿಸದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿ ಒತ್ತುವರಿ ತೆರವಿಗೆ ವಿರೋಧವ್ಯಕ್ತಪಡಿಸಿದ್ದಾರೆ.
ಗೋಳಿಕಟ್ಟಾ ವ್ಯಾಪ್ತಿಯ ಈ ಜಮೀನು ಈ ಹಿಂದೆ ಕಾಮದೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘದ ಅಧೀನದಲ್ಲಿತ್ತು. ಅರಣ್ಯ ಇಲಾಖೆಯಿಂದ ಲೀಸ್ ಮೂಲಕ ಜಮೀನು ಪಡೆದು ಸಂಘದ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತು. ಲೀಸ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಧಾರವಾಡ ಹೈಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಜಮೀನನ್ನು ಮರಳಿ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಇದಕ್ಕೆ ರೈತರು ಹಾಗೂ ಜಮೀನಿನೊಂದಿಗೆ ಸಂಬAಧ ಹೊಂದಿರುವ ಸಂಘದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಹಾಗೂ ಟ್ರ್ಯಾಕ್ಟರ್ಗಳ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳದಲ್ಲಿ ನೂರಾರು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಈ ದಿನ ಬೆಳಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಜೆಸಿಬಿ ಹಾಗೂ ಟ್ರ್ಯಾಕ್ಟರ್ಗಳೊಂದಿಗೆ ಸ್ಥಳಕ್ಕೆ ತೆರಳಿ ಜಮೀನಿನಲ್ಲಿರುವ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭಿಸಿದರು. ಕಾರ್ಯಾಚರಣೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಗೋಳಿಕಟ್ಟಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಕಂಡುಬAದಿತು. ತೆರವು ಕಾರ್ಯಾಚರಣೆಗೆ ಮಹಿಳೆಯರು ಹಾಗೂ ವೃದ್ಧರು ಸೇರಿದಂತೆ ಜಮೀನಿನೊಂದಿಗೆ ಸಂಬAಧ ಹೊಂದಿರುವ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅನೇಕರು ಕಣ್ಣೀರು ಸುರಿಸಿದರು.
`ತಮ್ಮ ಜೀವನೋಪಾಯಕ್ಕೆ ಆಧಾರವಾಗಿರುವ ಜಮೀನನ್ನು ಏಕಾಏಕಿ ತೆರವುಗೊಳಿಸಬಾರದು. ತಮ್ಮ ಸಮಸ್ಯೆಯನ್ನು ಆಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು’ ಎಂದು ಅಲ್ಲಿದ್ದವರು ಆಗ್ರಹಿಸಿದರು. ಕಾರ್ಯಾಚರಣೆಯ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.