ಜನರ ಅಹವಾಲುಗಳನ್ನು ಆಲಿಸಲು ಸರ್ಕಾರ `ಪ್ರಜಾ ಸೇವೆ’ ಎಂಬ ಆಂದೋಲನ ಆಯೋಜಿಸಿದ್ದು, ಸೆಪ್ಟೆಂಬರ್ 5ರಂದು ಅಂಕೋಲಾದ ಸ್ವಾತಂತ್ರ ಸಂಗ್ರಾಮ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಈ ಸಭೆ ನಡೆಸಲಾಗುತ್ತಿದೆ.
ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಅಗತ್ಯವಿರುವ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ನಿರ್ದೇಶನ ನೀಡಿದ್ದಾರೆ. ಈ ಕುರಿತು ಸಭೆ ನಡೆಸಿದ ಅವರು `ಪ್ರಜಾಸೇವೆ ಆಂದೋಲನ ಸಭೆ ನಡೆಯುವ ಸ್ಥಳದಲ್ಲಿ ಗ್ರಾಮ ಒನ್ ಕೌಂಟರ್ಗಳನ್ನು ಸ್ಥಾಪಿಸಿ, ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಸಾರ್ವಜನಿಕರ ಅರ್ಜಿಗಳನ್ನು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು. ಕುಂದು ಕೊರತೆ ಇತ್ಯರ್ಥಗೊಂಡ ಫಲಾನುಭವಿಗಳಿಗೆ ಸ್ಥಳದಲ್ಲೇ ಅನುಮೋದನಾ ಪತ್ರ & ಪರಿಹಾರ ಪ್ರಮಾಣಪತ್ರ ವಿತರಿಸಲು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸ್ಥಳದಲ್ಲಿ ಸಾರ್ವಜನಿಕರಿಗಾಗಿ ಕುಡಿಯುವ ನೀರು ಮತ್ತು ಮೂಲಭೂತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ನಿರಂತರ ವಿದ್ಯುತ್ ಪೂರೈಕೆ ಆಗಬೇಕು. ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಬೇಕು’ ಎಂದವರು ಸೂಚಿಸಿದ್ದಾರೆ.
`ಸಭೆ ನಡೆಯುವ ಸ್ಥಳದಲ್ಲಿ ಪಂಚ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಕುರಿತಂತೆ ಪ್ರಮುಖ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಬೇಕು. ಇಲಾಖೆಯ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಲು ಕೌಂಟರ್ ಗಳನ್ನು ತೆರೆದು ಫಾರ್ಮ್ ನೀಡಿ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಬೇಕು’ ಎಂದರು. `ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಭಟ್ಕಳ ತಾಲೂಕಿನ ಮುರುಡೇಶ್ವರ, ಶಿರಸಿಯ ಜಾನ್ಮನೆ, ಯಲ್ಲಾಪುರದ ಮಂಚಿಕೇರಿ, ಹಳಿಯಾದ ಸಾಂಬ್ರಾಣಿ ಮತ್ತು ಕುಮಟಾ ತಾಲೂಕಿನ ಕೂಜಳ್ಳಿ ಹೋಬಳಿಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಆಯೋಜಿಸಿಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು’ ಂದು ಸೂಚಿಸಿದರು.
ಈ ಸಭೆಯಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.