`ಕಸ್ತೂರಿ ರಂಗನ್ ವರದಿ ಪುನರ್ ಪರಿಶೀಲನೆ ಕುರಿತು ರಾಜ್ಯ ಸರ್ಕಾರ ಅಧಿವೇಶನದಲ್ಲಿ ಚರ್ಚಿಸಬೇಕು. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರಿಯಾದ ನಿರ್ಣಯ ಕೈಗೊಳ್ಳಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಸಂಘದ ಅಧ್ಯಕ್ಷ ಶಾಂತರಾಮ ನಾಯಕ ಅವರ ನಿಯೋಗ ಮನವಿ ಸಲ್ಲಿಸಿದೆ.
Advertisement. Scroll to continue reading.
ಅಂಕೋಲಾಗೆ ಆಗಮಿಸಿದ್ದ ಲಕ್ಷ್ಮಣ ಸವದಿ ಅವರನ್ನು ಶಾಂತರಾಮ ನಾಯಕ, ಶ್ಯಾಮನಾಥ ನಾಯ್ಕ, ಯಮೂನಾ ಗಾಂವ್ಕರ್, ಗೌರೀಶ ನಾಯಕ, ನಾಗೇಶ ಗೌಡ ಅವರು ಭೇಟಿ ಮಾಡಿದರು. `ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರಿಸುವ ಸಂಬoಧ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು’ ಎಂದು ಅವರು ಒತ್ತಾಯಿಸಿದರು. ಈ ಬಗ್ಗೆ ವಿಶೇಷ ಅಧಿವೇಶನದಲ್ಲಿ ಕೂಲಂಕುಷವಾಗಿ ಚರ್ಚಿಸಿ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು. `ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಸುಮಾರು 40 ಲಕ್ಷ ಜನರಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಆತಂಕ ಮೂಡಿದ್ದು, ಅವರ ಜೀವನೋಪಾಯ ಹಾಗೂ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.
`ಕಸ್ತೂರಿ ರಂಗನ್ ವರದಿಗೆ ಸಂಬoಧಿಸಿದoತೆ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಕರ್ನಾಟಕ ಸರ್ಕಾರ ಕೇಂದ್ರದ ಪ್ರಸ್ತಾವನೆಗಳಿಗೆ ತಕರಾರು ಸಲ್ಲಿಸಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಕರಡು ಅಧಿಸೂಚನೆಗೂ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಬೇಕು. ವೈಜ್ಞಾನಿಕ ತಳಹದಿಯಲ್ಲಿ ಪರಿಶೀಲನೆ ನಡೆಯಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಹೇಳಿದರು. `ಕೇಂದ್ರ ಸರ್ಕಾರವು 2026ರ ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯಡಿ ಕರ್ನಾಟಕದ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ ಸೇರಿದಂತೆ 10 ಜಿಲ್ಲೆಗಳ 39 ತಾಲೂಕುಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸಲು ಗುರುತಿಸಲಾಗಿದೆ. ಕರಡು ಅಧಿಸೂಚನೆಯಡಿ ಗಣಿಗಾರಿಕೆ, ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ, ಉಷ್ಣ ವಿದ್ಯುತ್ ಸ್ಥಾವರಗಳು ಹಾಗೂ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಕಟ್ಟಡ ಮತ್ತು ಟೌನ್ಶಿಪ್ ಅಭಿವೃದ್ಧಿ ಚಟುವಟಿಕೆಗಳನ್ನು ನಿಯಂತ್ರಿಸಲು ಪ್ರಸ್ತಾಪಿಸಲಾಗಿದೆ. ಕೃಷಿ, ನೆಡುತೋಪು ಸೇರಿದಂತೆ ಜನರ ದೈನಂದಿನ ಜೀವನಾಧಾರ ಚಟುವಟಿಕೆಗಳ ಮೇಲೆ ನಿರ್ದಿಷ್ಟ ಪರಿಣಾಮ ಬೀರಲಿದೆ’ ಎಂಬ ಆತಂಕವನ್ನುವ್ಯಕ್ತಪಡಿಸಿದರು.
Advertisement. Scroll to continue reading.