ಕಸ್ತೂರಿ ರಂಗನ್ ವರದಿಯ ಬಗ್ಗೆ ಯಲ್ಲಾಪುರದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯವರು ತೀವೃ ಕಳವಳವ್ಯಕ್ತಪಡಿಸಿದ್ದಾರೆ. `ರಾಜ್ಯ ಸರ್ಕಾರವೂ ಆ ವರದಿಯನ್ನು ತಿರಸ್ಕರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಅವರು ಕಸ್ತೂರಿ ರಂಗನ್ ವರದಿಯ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದ್ದು, ಅವರ ಬೇಡಿಕೆಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯವರು ಧ್ವನಿಯಾಗಿದ್ದಾರೆ. ಈ ಕುರಿತು ಗುರುವಾರ ಯಲ್ಲಾಪುರ ತಹಶೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ರವಾನಿಸಿದ್ದಾರೆ. `ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯಡಿ ಗಣಿಗಾರಿಕೆ, ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ, ಉಷ್ಣ ವಿದ್ಯುತ್ ಸ್ಥಾವರಗಳು ಹಾಗೂ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಕಟ್ಟಡ ಮತ್ತು ಟೌನ್ಶಿಪ್ ಅಭಿವೃದ್ಧಿ ಚಟುವಟಿಕೆಗಳನ್ನು ನಿಯಂತ್ರಿಸಲು ಪ್ರಸ್ತಾಪಿಸಲಾಗಿದೆ. ಕೃಷಿ, ನೆಡುತೋಪು ಸೇರಿದಂತೆ ಜನರ ದೈನಂದಿನ ಜೀವನಾಧಾರ ಚಟುವಟಿಕೆಗಳ ಮೇಲೆ ನಿರ್ದಿಷ್ಟ ಪರಿಣಾಮ ಬೀರಲಿದೆ. ಕಸ್ತೂರಿ ರಂಗನ್ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದರಿಂದ ಈಗಾಗಲೇ ಅಭಯಾರಣ್ಯಗಳು, ರಕ್ಷಿತ ಪ್ರದೇಶಗಳು, ಅಧಿಸೂಚಿತ ಅರಣ್ಯಗಳು ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸಲ್ಪಟ್ಟಿರುವ ಪ್ರದೇಶಗಳ ಮೇಲೆ ಹೆಚ್ಚುವರಿ ನಿರ್ಬಂಧಗಳು ಉಂಟಾಗುವ ಸಾಧ್ಯತೆಗಳಿವೆ. ಇದರಿಂದ ಪಶ್ಚಿಮಘಟ್ಟದ ಜನರ ಜೀವನೋಪಾಯಕ್ಕೆ ಪ್ರತಿಕೂಲ ಪರಿಣಾಮ ಬೀರಲಿದೆ’ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸದಸ್ಯರಾದ ಲಕ್ಷ್ಮಿ ಸಿದ್ದಿ, ಪ್ರೇಮಾನಂದ ವೇಳಿಪ,ರಾಜೇಶ್ ಗೌಡ, ಬೀಮಣ್ಣ ಬೋವಿ, ಜೋನ್ ಬಿಳ್ಕಿಕರ್, ಬಜ್ಜು ಜನ್ನು ಪಿಂಗಳೆ,ನಾರಾಯಣ ಕಣುಬಿ, ಗೌರಿ ಮರಾಠಿ, ಡಿ ಶ್ಯಾಮಸನ್, ಗಂಗಾ ಕೊಕರೆ ಅವರು ಹೇಳಿದ್ದಾರೆ.
`ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರಿಸುವ ಕಸ್ತೂರಿ ರಂಗನ್ ವರದಿ ಆದರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಗೆ ಕರ್ನಾಟಕ ರಾಜ್ಯ ಸರ್ಕಾರ ಸಮರ್ಪಕ ಆಕ್ಷೇಪಣೆ ಸಲ್ಲಿಸುವುದು ಅತಿ ಮುಖ್ಯವಾಗಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. `ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಸುಮಾರು 40 ಲಕ್ಷ ಜನರಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಆತಂಕ ಮೂಡಿದೆ. ಅಲ್ಲಿನವರ ಜೀವನೋಪಾಯ ಹಾಗೂ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
Advertisement. Scroll to continue reading.
`ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡವು 2013ರಲ್ಲಿ ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ಬಾಹ್ಯಾಕಾಶ ಮೂಲಕ ಸರ್ವೆ ಮಾಡಿ ವರದಿ ಸಲ್ಲಿಸಿತ್ತು. ವರದಿಯಲ್ಲಿ ದೇಶದ ಆರು ರಾಜ್ಯಗಳ ಸುಮಾರು 56,000 ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಶಿಫಾರಸು ಮಾಡಲಾಗಿದ್ದು, ಕರ್ನಾಟಕದ 20,668 ಚದರ ಕಿಮೀ. ಪ್ರದೇಶ ಇದರಲ್ಲಿ ಸೇರಿದೆ. ಕೇಂದ್ರ ಸರ್ಕಾರವು 2026ರಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯಡಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ 10 ಜಿಲ್ಲೆಗಳ 39 ತಾಲ್ಲೂಕುಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸಲು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 567 ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಬರುತ್ತವೆ’ ಎಂದವರು ಆತಂಕವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ವಿಷಯಗಳ ಬಗ್ಗೆ ಅವರು ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದ್ದಾರೆ.