Advertisement. Scroll to continue reading.
`ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಗೆ 7ನೇ ಕರಡು ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ರಾಜ್ಯ ಸರ್ಕಾರ ತಕರಾರು ಸಲ್ಲಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ. ಈ ಕುರಿತು ಸೆಪ್ಟೆಂಬರ್ 7ರಂದು ಅಂಕೋಲಾ ನಗರದಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಘದ ಅಧ್ಯಕ್ಷ ಶಾಂತರಾಮ ನಾಯಕ ಅವರು ಹೇಳಿದ್ದಾರೆ.
ಆ ದಿನ ಬೆಳಿಗ್ಗೆ 11ಗಂಟೆಗೆ ನಗರದ ಸತ್ಯಾಗ್ರಹ ಸ್ಮಾರಕ ಭವನದ ಎದುರಿನಿಂದ ಬೃಹತ್ ಮೆರವಣಿಗೆ ಸಂಘಟಿಸಲಾಗಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಒಳಪಡುವ ಸೂಕ್ಷ್ಮ ವಲಯ ಎಂದು ಗುರುತಿಸಲ್ಪಟ್ಟ 38 ಗ್ರಾಮದ ಜನ ಇದರಲ್ಲಿ ಭಾಗವಹಿಸಬೇಕು’ ಎಂದವರು ಮನವಿ ಮಾಡಿದ್ದಾರೆ. ಈ ಕುರಿತಾದ ಕರಪತ್ರ ಬಿಡುಗಡೆ ಮಾಡಿದ ಅವರು `ಪಶ್ಚಿಮಘಟ್ಟದಲ್ಲಿ ವಾಸಿಸುವ ಜನರಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಆತಂಕ ಮೂಡಿದೆ. ಅವರ ಜೀವನೋಪಾಯ ಹಾಗೂ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
`ಕಸ್ತೂರಿ ರಂಗನ್ ವರದಿಗೆ ಸಂಬoಧಿಸಿದ0ತೆ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಕರ್ನಾಟಕ ಸರ್ಕಾರ ಕೇಂದ್ರದ ಪ್ರಸ್ತಾವನೆಗಳಿಗೆ ತಕರಾರು ಸಲ್ಲಿಸಿತ್ತು. ಇದೇ ನಿಲುವನ್ನು ಮುಂದುವರಿಸಿ, ಪ್ರಸ್ತುತ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಕರಡು ಅಧಿಸೂಚನೆಗೂ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಬೇಕು’ ಎಂದು ಸಮಿತಿ ಒತ್ತಾಯಿಸಿದೆ. `ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡವು 2013ರಲ್ಲಿ ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ವರದಿ ಸಲ್ಲಿಸಿತ್ತು. ವರದಿಯಲ್ಲಿ ದೇಶದ ಆರು ರಾಜ್ಯಗಳ ಸುಮಾರು 56,000 ಚದರ ಕಿಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಶಿಫಾರಸು ಮಾಡಲಾಗಿದ್ದು, ಕರ್ನಾಟಕದ 20,668 ಚದರ ಕಿಮೀ ಪ್ರದೇಶ ಇದರಲ್ಲಿ ಸೇರಿದೆ. ಕೇಂದ್ರ ಸರ್ಕಾರವು 2026ರ ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯಡಿ ಕರ್ನಾಟಕದ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ ಸೇರಿದಂತೆ 10 ಜಿಲ್ಲೆಗಳ 39 ತಾಲ್ಲೂಕುಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸಲು ಗುರುತಿಸಲಾಗಿದೆ’ ಎಂದವರು ವಿವರಿಸಿದ್ದಾರೆ.
Advertisement. Scroll to continue reading.
`ಕರಡು ಅಧಿಸೂಚನೆಯಡಿ ಗಣಿಗಾರಿಕೆ, ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ, ಉಷ್ಣ ವಿದ್ಯುತ್ ಸ್ಥಾವರಗಳು ಹಾಗೂ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಕಟ್ಟಡ ಮತ್ತು ಟೌನ್ಶಿಪ್ ಅಭಿವೃದ್ಧಿ ಚಟುವಟಿಕೆಗಳನ್ನು ನಿಯಂತ್ರಿಸಲು ಪ್ರಸ್ತಾಪಿಸಲಾಗಿದೆ. ಕೃಷಿ, ನೆಡುತೋಪು ಸೇರಿದಂತೆ ಜನರ ದೈನಂದಿನ ಜೀವನಾಧಾರ ಚಟುವಟಿಕೆಗಳ ಮೇಲೆ ನಿರ್ದಿಷ್ಟ ಪರಿಣಾಮ ಬೀರಲಿದೆ.
ಕಸ್ತೂರಿ ರಂಗನ್ ಸಮಿತಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದರಿಂದ ಈಗಾಗಲೇ ರಕ್ಷಿತ ಪ್ರದೇಶಗಳು, ಅಧಿಸೂಚಿತ ಅರಣ್ಯಗಳು ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸಲ್ಪಟ್ಟಿರುವ ಪ್ರದೇಶಗಳ ಮೇಲೆ ಹೆಚ್ಚುವರಿ ನಿರ್ಬಂಧಗಳು ಉಂಟಾಗಬಹುದು. ಇದರಿಂದ ಪಶ್ಚಿಮಘಟ್ಟದ ಜನರ ಜೀವನೋಪಾಯಕ್ಕೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದವರು ಹೇಳಿದ್ದಾರೆ. ರೈತ ಸಂಘದ ತಾಲೂಕು ಅಧ್ಯಕ್ಷರಾದ ಗೌರೀಶ ನಾಯಕ, ಪದಾಧಿಕಾರಿಗಳಾದ ಉದಯ ನಾಯ್ಕ ಹೊಸಗದ್ದೆ, ವೆಂಕಟ್ರಮಣ ಗೌಡ, ಮಾದೇವ ಗೌಡ, ಶಿವರಾಮ ಪಟಗಾರ, ಮೀನಾಕ್ಷಿ ಟಿ. ಗೌಡ, ತುಳಸಿ ಗೌಡ, ದೇವೆಂದ್ರ ಸೋಮು ಗೌಡ ಅವರು ಈ ಹೋರಾಟದಲ್ಲಿ ಭಾಗಿಯಾಗುವುದಾಗಿ ಘೋಷಿಸಿದ್ದಾರೆ.
Advertisement. Scroll to continue reading.