`ಪ್ರಜಾ ಸೇವೆ ಆಂದೋಲನದ ಸಭೆಯಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಆದ್ಯತೆ ಮೇರೆಗೆ ಕ್ರಮ ಜರುಗಿಸಬೇಕು’ ಎಂದು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಸೂಚನೆ ನೀಡಿದ್ದಾರೆ. `ಸಮಸ್ಯೆ ಬಗೆಹರಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದವರು ನಿರ್ದೇಶಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿ ಮಾಡುವ ಕುರಿತು ಸಭೆ ನಡೆಸಿದ್ದು, `ಸೆಪ್ಟಂಬರ್ 5ರಂದು ನಡೆದ ಪ್ರಜಾಸೇವೆ ಆಂದೋಲನ ಸಭೆಯ ನಂತರದ ದಿನವೂ ಕೂಡಾ ಸಾರ್ವಜನಿಕರು ಐ.ಪಿ.ಜಿ.ಆರ್.ಎಸ್. ಪೋರ್ಟಲ್ ನಲ್ಲಿ ಅವಹಾಲುಗಳನ್ನು ಸಲ್ಲಿಸಿದ್ದು, 2 ದಿನಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 1642 ಅರ್ಜಿಗಳು ಸ್ವೀಕೃತಗೊಂಡಿದೆ. ಅವುಗಳಲ್ಲಿ ಇಂದಿನವರೆಗೆ 489 ಅರ್ಜಿಗಳು ವಿಲೇವಾರಿ ಆಗಿದ್ದು, ಉಳಿದ ಅರ್ಜಿಗಳನ್ನು ಸಂಬAಧÀಪಟ್ಟ ಇಲಾಖೆಗಳು ಒಂದು ವಾರದ ಅವಧಿಯಲ್ಲಿ ವಿಲೇವಾರಿ ಮಾಡಬೇಕು’ ಎಂದು ಸೂಚಿಸಿದರು. ಅರ್ಜಿಗಳ ವಿಲೇವಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿವರವಾದ ಮಾಹಿತಿಯನ್ನು ನೀಡುವಂತೆ ತಿಳಿಸಿದ ಅವರು `ಹೊಸ ಕಾಮಗಾರಿ, ಯೋಜನೆಗಳ ಕುರಿತು ಮನವಿಗಳು ಸಲ್ಲಿಕೆಯಾಗಿದ್ದಲ್ಲಿ ಈ ಬಗ್ಗೆ ಪ್ರಸ್ತಾವನೆಯನ್ನು ಸಿದ್ದಪಡಿಸಿ ತಮ್ಮ ಕೇಂದ್ರ ಕಚೇರಿಗೆ ಅಥವಾ ಸರ್ಕಾರಕ್ಕೆ ಸಲ್ಲಿಸಿ ಅನುದಾನ ಬಿಡುಗಡೆಗೆ ಫಾಲೋ ಅಪ್ ಮಾಡಬೇಕು. ಒಂದು ವೇಳೆ ಅನುದಾನ ಲಭ್ಯವಿದ್ದಲ್ಲಿ ಕಾಮಗಾರಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಅರ್ಜಿಗಳ ಪರಿಶೀಲನೆ ಮತ್ತು ವಿಲೇವಾರಿಯಲ್ಲಿ ಯಾವುದೇ ರೀತಿಯ ನಿರ್ಲಕ್ಷö್ಯ ವಹಿಸದೇ, ಎಲ್ಲಾ ಅರ್ಜಿಗಳನ್ನು ಶೇ 100ರಷ್ಟು ವಿಲೇವಾರಿ ಮಾಡಬೇಕು’ ಎಂದರು.
`ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳು ಐ.ಪಿ.ಜಿ.ಆರ್.ಎಸ್. ಪೋರ್ಟಲ್ ಮೂಲಕ ಸಂಬAಧಪಟ್ಟ ಇಲಾಖೆಗಳ ಲಾಗಿನ್ ಈಗಾಗಲೇ ವರ್ಗಾವಣೆಯಾಗಿದ್ದು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಲಾಗಿನ್ಗಳನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಮಾಲೋಚರನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದರು. `ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಎಲ್ಲಾ ಅಧಿಕಾರಿಗಳು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಗರಿಷ್ಠ ಪ್ರಯತ್ನ ನಡೆಸಬೇಕು. ಈ ಯೋಜನೆಯು ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವ ರೀತಿಯಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದರು.
Advertisement. Scroll to continue reading.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಇದ್ದರು.