`ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಬದುಕು ನಡೆಸಲು ಸ್ವ-ಸಹಾಯ ಸಂಘಗಳು ಅತ್ಯಾವಶ್ಯಕ’ ಎಂದು ಸ್ಕೊಡ್ವೆಸ್ ಸಂಸ್ಥೆಯ ಕಾರ್ಯದರ್ಶಿ ಸರಸ್ವತಿ ಎನ್ ರವಿ ಅವರು ಹೇಳಿದ್ದಾರೆ. ಸ್ಕೊಡ್ವೆಸ್ ಸಂಸ್ಥೆಯು ಉತ್ಕರ್ಷ ಯೋಜನೆಯಡಿ ಬನವಾಸಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನೂತನವಾಗಿ ರಚಿಸಲಾದ 10 ನೂತನ ಮಹಿಳಾ ಸ್ವ-ಸಹಾಯ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು `ಸ್ಕೊಡ್ವೆಸ್ ಸಂಸ್ಥೆಯು ಕಳೆದ 21 ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿದ್ದು, ಮಹಿಳಾ ಸಬಲೀಕರಣ ಹಾಗೂ ಮಹಿಳಾ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ’ ಎಂದು ವಿವರಿಸಿದ್ದಾರೆ.
Advertisement. Scroll to continue reading.
Advertisement. Scroll to continue reading.
`ಪ್ರಸ್ತುತ 29 ಜಿಲ್ಲೆಗಳು ಹಾಗೂ 05 ರಾಜ್ಯಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಉತ್ತರ ಕನ್ನಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಉತ್ಕರ್ಷ ಯೋಜನೆಯನ್ನು ಅನುಷ್ಠಾನಗೊಳಿಸುವುದರ ಮೂಲಕ ಗ್ರಾಮೀಣ ಮಹಿಳೆಯರನ್ನು ಸಂಘಟಿಸಿ, ಸ್ವ-ಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕಾರ್ಯ ಮಾಡಲಾಗುತ್ತಿದೆ’ ಎಂದವರು ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬನವಾಸಿ ಗ್ರಾಮ ಪಂಚಾಯಿತಿಯ ಪಿಡಿಒ ಮಹಮ್ಮದ್ ರಿಯಾಝ್ ಮಾತನಾಡಿ `ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಗ್ರಾಮೀಣ ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬನವಾಸಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಸಿದ್ದರಾಮ ಬೀರ್ದಾರ್, ಸ್ಕೊಡ್ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣಪತಿ ನಾಯ್ಕ, ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಅಧಿಕಾರಿಗಳಾದ ಆರೇರಯ್ಯ ಮತ್ತು ಮಾರುತಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ಕೊಡ್ವೆಸ್ ಸಂಸ್ಥೆಯ ಉತ್ಕರ್ಷ ಯೋಜನೆಯ ಸಿಬ್ಬಂದಿಗಳು, ಸ್ಕೊಡ್ವೆಸ್ ಮಹಿಳಾ ಸೌಹಾರ್ದದ ಸಿಬ್ಬಂದಿಗಳು ಹಾಗೂ ಸ್ವ-ಸಹಾಯ ಸಂಘಗಳ ಸದಸ್ಯರು ಸೇರಿದಂತೆ 100ಕ್ಕೂ ಅಧಿಕ ಮಹಿಳೆಯರು ಉಪಸ್ಥಿತರಿದ್ದರು.
Advertisement. Scroll to continue reading.