ಗಣೇಶ ಹಬ್ಬ ಅವಧಿಯಲ್ಲಿಯೇ ಭಟ್ಕಳದಲ್ಲಿ ಗಲಾಟೆ ನಡೆಯುತ್ತಿದೆ. ಗಣೇಶ ಉತ್ಸವ ಮೆರವಣಿಗೆ ಹಾಗೂ ಮದರಸಾ ಮೇಲೆ ದಾಳಿ ನಡೆಸಿದ್ದ ಕಿಡಿಗೇಡಿಗಳು ಮತ್ತೆ ತಮ್ಮ ಅಟ್ಟಹಾಸ ಮುಂದುವರೆಸಿದ್ದಾರೆ. ಗಣಪತಿ ವಿಸರ್ಜನೆ ಸಿದ್ದತೆ ನಡೆಯುವ ವೇಳೆ ಇನ್ನೊಮ್ಮೆ ಭಟ್ಕಳದಲ್ಲಿ ಕಲ್ಲು ತೂರಾಟ ನಡೆದಿದೆ.
ಭಟ್ಕಳ ನಗರದ ತಾಲೂಕು ರಿಕ್ಷಾ ಚಾಲಕ-ಮಾಲೀಕರ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿದ್ದ ಗಣಪತಿ ಪೆಂಡಾಲ್ನ ಹಿಂಭಾಗದಿoದ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟದಿಂದ ಪೆಂಡಾಲ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಭಟ್ಕಳ ಶಹರಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಣಪತಿ ವಿಸರ್ಜನೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೆಂಡಾಲ್ ಮೇಲೆ ಕಲ್ಲು ತೂರಾಟ ನಡೆದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ಸಂಬoಧಿಸಿದoತೆ ಸಂಘದ ಅಧ್ಯಕ್ಷ ಮಂಜುನಾಥ ಗಣಪತಿ ನಾಯ್ಕ ಅವರು ಭಟ್ಕಳದ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಭಟ್ಕಳ ನಗರದಲ್ಲಿ ನಾಲ್ಕು ಗಣಪತಿ ಮೂರ್ತಿಗಳ ವಿಸರ್ಜನೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ವಿಶೇಷ ಭದ್ರತಾ ವ್ಯವಸ್ಥೆ ಕೈಗೊಂಡಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರದ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದಾದ್ಯಂತ ಸಿಸಿ ಕ್ಯಾಮೆರಾಗಳ ಮೂಲಕವೂ ನಿರಂತರ ನಿಗಾ ವಹಿಸಲಾಗುತ್ತಿದೆ. ಭಟ್ಕಳದಲ್ಲಿ ಭದ್ರತೆಗಾಗಿ ಡಿಎಆರ್ ಮತ್ತು ಕೆಎಸ್ಆರ್ಪಿ ಸ್ಟ್ರೈಕಿಂಗ್ ಫೋರ್ಸ್ನ 5 ತುಕಡಿಗಳು, ಎಸ್ಎಎಫ್ನ ಒಂದು ಕಂಪನಿಯ 21 ಸಿಬ್ಬಂದಿ ಹಾಗೂ ಆರ್ಎಎಫ್ನ ಒಂದು ಕಂಪನಿಯ 136 ಸಿಬ್ಬಂದಿ ಸೇರಿದಂತೆ ದೊಡ್ಡ ಪ್ರಮಾಣದ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ನಗರದ ಸೂಕ್ಷ್ಮ ಪ್ರದೇಶಗಳು, ಪ್ರಮುಖ ರಸ್ತೆ, ಗಣಪತಿ ವಿಸರ್ಜನಾ ಮಾರ್ಗಗಳು ಹಾಗೂ ಜನಸಂದಣಿ ಸೇರುವ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ಎಸ್ಪಿ ದೀಪನ್ ಎಂ.ಎನ್. ಅವರು ಭಟ್ಕಳದಲ್ಲೇ ಮೊಕ್ಕಾಂ ಹೂಡಿ ಭದ್ರತಾ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ವಿಸರ್ಜನಾ ಮೆರವಣಿಗೆಗಳು ಶಾಂತಿಯುತವಾಗಿ ನಡೆಯುವಂತೆ ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಈ ನಡುವೆ ಗಣಪತಿ ಪೆಂಡಾಲ್ ಮೇಲೆ ನಡೆದಿರುವ ಕಲ್ಲುತೂರಾಟದ ಘಟನೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಗೆ ಕಾರಣರಾದವರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.