ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಮಳೆಯ ಅಬ್ಬರದ ನಡುವೆಯೂ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಅರ್ಜಿ ವಿತರಣೆ ಹಾಗೂ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 61,476 ಎಸ್ಐಆರ್ ಅರ್ಜಿಗಳನ್ನು ವಿತರಣೆ ಮಾಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಈ ವಿಶೇಷ ಅಭಿಯಾನದಲ್ಲಿ ಮತದಾರರ ವಿವರಗಳ ಪರಿಶೀಲನೆ, ಹೊಸ ಮತದಾರರ ಸೇರ್ಪಡೆ, ಹೆಸರು ತಿದ್ದುಪಡಿ ಹಾಗೂ ಅಗತ್ಯ ದಾಖಲೆಗಳ ಸಂಗ್ರಹ ಕಾರ್ಯ ಕೈಗೊಳ್ಳಲಾಗಿದೆ.
ಬಿಎಲ್ಒಗಳು ಹಾಗೂ ಚುನಾವಣಾ ಸಿಬ್ಬಂದಿ ಮನೆ-ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸುತ್ತಿದ್ದಾರೆ. ಜಿಲ್ಲಾವಾರು ವಿತರಣೆಗೊಂಡ ಅರ್ಜಿಗಳ ಪೈಕಿ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ 2,774, ಯಲ್ಲಾಪುರದಲ್ಲಿ 15,394, ಮುಂಡಗೋಡಿನಲ್ಲಿ 13,394, ಭಟ್ಕಳದಲ್ಲಿ 9,469, ಶಿರಸಿಯಲ್ಲಿ 11,515 ಹಾಗೂ ಹೊನ್ನಾವರದಲ್ಲಿ 8,930 ಅರ್ಜಿಗಳನ್ನು ವಿತರಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 61,476 ಅರ್ಜಿಗಳು ವಿತರಣೆಗೊಂಡಿವೆ.
ಜಿಲ್ಲೆಯಲ್ಲಿ ಒಟ್ಟು 1,445 ಬಿಎಲ್ಒಗಳು ಕಾರ್ಯನಿರ್ವಹಿಸುತ್ತಿದ್ದು, ಮನೆ-ಮನೆ ಭೇಟಿ ಮೂಲಕ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಹಲವೆಡೆ ಮಳೆಯ ಕೊರತೆಯಿದ್ದರೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯವನ್ನು ಮುಂದುವರಿಸಿದ್ದಾರೆ. ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಎಸ್ಐಆರ್ ಪ್ರಕ್ರಿಯೆಯಡಿ ಅರ್ಹ ಮತದಾರರು ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಲಾಗಿದೆ. ಈ ಅಭಿಯಾನದ ಮೂಲಕ ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಮತ್ತು ಸಮಗ್ರಗೊಳಿಸುವ ಉದ್ದೇಶ ಹೊಂದಲಾಗಿದೆ.