ಶಿರಸಿ ಸರ್ಕಾರಿ ಆಸ್ಪತ್ರೆ ಕುರಿತು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಕೇಳಿದ ಪ್ರಶ್ನೆಗಳಿಗೆ ಶಾಸಕ ಭೀಮಣ್ಣ ನಾಯ್ಕ ಅವರು ಯಾವುದೇ ಉತ್ತರ ನೀಡಿಲ್ಲ. ಅಗಸ್ಟ್ 1ರ ಒಳಗೆ ತಮ್ಮ ಏಳು ಪ್ರಶ್ನೆಗಳಿಗೆ ಉತ್ತರ ಸಿಗದೇ ಇದ್ದರೆ ಪಾದಯಾತ್ರೆ ಮೂಲಕ ಹೊರಾಟ ನಡೆಸುವುದಾಗಿ ಅನಂತಮೂರ್ತಿ ಹೆಗಡೆ ಅವರು ಎಚ್ಚರಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ಸರ್ಕಾರಿ ಆಸ್ಪತ್ರೆ ಅಭಿವೃದ್ದಿ ಕುರಿತು ಏಳು ಪ್ರಶ್ನೆಗಳನ್ನು ಕೇಳಲಾಗಿತ್ತು. ಆದರೆ, ಶಾಸಕರು ಅದಕ್ಕೆ ಉತ್ತರಿಸಿಲ್ಲ. ಅಧಿಕಾರಿಗಳು ಸಹ ಪ್ರತಿಕ್ರಿಯಿಸಿಲ್ಲ. ಆಸ್ಪತ್ರೆಯನ್ನು ಮೂಲ ಸ್ವರೂಪದಲ್ಲಿಯೇ ಕಾರ್ಯಾರಂಭಗೊಳಿಸದೆ ಹಾಳು ಮಾಡಲಾಗುತ್ತಿದೆ’ ಎಂದವರು ದೂರಿದರು. `ಆರೋಗ್ಯ ಸಚಿವ ಯು ಟಿ ಖಾದರ್ ಅವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲೂ ಆಸ್ಪತ್ರೆಯ ಸಮಸ್ಯೆಗಳ ಕುರಿತು ಶಾಸಕರು ಗಮನಕ್ಕೆ ತಂದಿಲ್ಲ. ಆಸ್ಪತ್ರೆ ಕಟ್ಟಡ ನಿರ್ಮಾಣ ಪೂರ್ಣಗೊಂಡು ವರ್ಷ ಕಳೆದರೂ ಇನ್ನೂ ವೈದ್ಯಕೀಯ ಯಂತ್ರೋಪಕರಣಗಳ ಖರೀದಿ ನಡೆದಿಲ್ಲ’ ಎಂದು ಆಕ್ಷೇಪಿಸಿದರು.
`ಕಾಂಗ್ರೆಸ್ ಸರ್ಕಾರದ ಸಚಿವರು ಶಿರಸಿಗೆ ಬಂದು ಭರವಸೆ ನೀಡಿ ಹೋಗುತ್ತಿದ್ದಾರೆ. ಆದರೆ ಸಮಸ್ಯೆಗಳು ಮಾತ್ರ ಹಾಗೆಯೇ ಉಳಿದಿವೆ. ಆಸ್ಪತ್ರೆಗೆ ಆರಂಭದಲ್ಲಿ ಸುಮಾರು 30 ಕೋಟಿ ಮೌಲ್ಯದ ವೈದ್ಯಕೀಯ ಯಂತ್ರೋಪಕರಣಗಳ ಯೋಜನೆ ಇದ್ದು, ಅದು ಈಗ 5.20 ಕೋಟಿಗೆ ಸೀಮಿತಗೊಂಡಿದೆ. ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಯಂತ್ರಗಳ ಪಟ್ಟಿಯಲ್ಲಿ ಇಲ್ಲ. ಆದ್ಯತಾ ಪಟ್ಟಿಯಲ್ಲಿ ಇದೆ ಎಂದು ಹೇಳುವುದರಿಂದ ಪ್ರಯೋಜನವಿಲ್ಲ. ಶೀಘ್ರವೇ ಎಲ್ಲಾ ಅಗತ್ಯ ಯಂತ್ರೋಪಕರಣಗಳನ್ನು ಅಳವಡಿಸಬೇಕು’ ಎಂದು ಆಗ್ರಹಿಸಿದರು. `ಶಿರಸಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ಎಲ್ಲ ವಿಶೇಷ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗಬೇಕು. ಆಸ್ಪತ್ರೆಯನ್ನು ಪೂರ್ಣ ಪ್ರಮಾಣದ ಟ್ರಾಮಾ ಸೆಂಟರ್ ಆಗಿ ಅಭಿವೃದ್ಧಿಪಡಿಸಬೇಕು ಎಂದು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
`ಅಗಸ್ಟ್ 1ರೊಳಗೆ ಆಸ್ಪತ್ರೆ ಅಭಿವೃದ್ಧಿ ಕುರಿತು ಸ್ಪಷ್ಟ ಉತ್ತರ ನೀಡದಿದ್ದರೆ ಹಾಗೂ ಅಗತ್ಯ ಪ್ರಕ್ರಿಯೆ ಆರಂಭಿಸದಿದ್ದರೆ ಪಾದಯಾತ್ರೆ, ಧರಣಿ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುತ್ತದೆ. ಹಳ್ಳಿ ಹಳ್ಳಿಗೆ ತೆರಳಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಜಾಗೃತಿ ಅಭಿಯಾನ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು. ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ, ಸುರೇಶ್ ನಾಯ್ಕ ಕಾನಗೋಡ, ನಾರಾಯಣ ಹೆಗಡೆ ಮತ್ತಿಗಟ್ಟ, ರವಿ ಗಾಂವ್ಕರ್, ಹಾಗೂ ರಾಘವೇಂದ್ರ ನಾಯ್ಕ ಇದ್ದರು.