ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ದಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 20 ನಿಮಿಷಗಳ ಕಾಲ ಏಕಾಂಗಿಯಾಗಿ ಅವರು ಪ್ರಧಾನಿಗಳ ಜೊತೆ ಏಕಾಂಗಿಯಾಗಿ ಮಾತನಾಡಿದ್ದಾರೆ.
ಪ್ರಧಾನಿ ಕಾರ್ಯಾಲಯ ಪ್ರವೇಶಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಲ್ಲಿನ ಸಿಬ್ಬಂದಿ ಆತ್ಮೀಯವಾಗಿ ಬರ ಮಾಡಿಕೊಂಡಿದ್ದು, ನೇರವಾಗಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ವೇಳೆ ಉತ್ತರ ಕನ್ನಡ ಜಿಲ್ಲೆಯ ಪೃಕೃತಿ ವಿಕೋಪ ಸನ್ನಿವೇಶಗಳ ಬಗ್ಗೆ ಪ್ರಧಾನಿಯವರಿಗೆ ತಿಳಿಸಿದ ಸಂಸದರು ಅವಘಡದ ವೇಳೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸಹಾಯ ಮಾಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಅದಾದ ನಂತರ ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ಸನ್ನಿವೇಶ, ಇಲ್ಲಿನ ಮಳೆ-ಬೆಳೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಸ್ತೆ ಹಾಗೂ ರೈಲು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸುವ ಕನಸು ಕಂಡಿರುವುದಾಗಿ ಕಾಗೇರಿಯವರು ಮೋದಿಯರವಲ್ಲಿ ಹೇಳಿಕೊಂಡಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಿತ್ತೂರು ಹಾಗೂ ಖಾನಾಪುರ ಭಾಗವೂ ಬರುತ್ತಿದ್ದು, ಅಲ್ಲಿನ ಅಭಿವೃದ್ಧಿ ಚಟುವಟಿಕೆಯ ಬಗ್ಗೆಯೂ ವಿವರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ವೈಶಿಷ್ಟತೆಯ ಬಗ್ಗೆ ವಿವರಿಸಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮಾತುಗಳನ್ನು ಸಂಪೂರ್ಣವಾಗಿ ಆಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು `ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಿ’ ಎಂದು ಹೇಳಿದ್ದಾರೆ.