ಗೌರಿ ಗಣೇಶ ಹಬ್ಬದ ಹಿನ್ನಲೆ ಎಲ್ಲಡೆ ಗಣಪತಿ ಮೂರ್ತಿಗಳನ್ನು ಮನೆಗೆ ಬರ ಮಾಡಿಕೊಳ್ಳುವ ಸಿದ್ಧತೆ ಜೋರಾಗಿದೆ. ಆದರೆ, ಈ ಬಾರಿಯೂ ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಮಾಡಲಾದ ಗಣಪತಿ ಮೂರ್ತಿಗಳ ಸ್ಥಾಪನೆಯನ್ನು ಜಿಲ್ಲಾಡಳಿತ ನಿಷೇಧಿಸಿದೆ.
`ಉತ್ತರ ಕನ್ನಡ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಮಾಲಿನ್ಯ ತಡೆಯಲು ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಮಾಡಿದ ಗಣೇಶ ಮೂರ್ತಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದ್ದು, ಯಾವುದೇ ಸಂದರ್ಭದಲ್ಲೂ ಡಿಜೆ. ಬಳಕೆಗೆ ಕೂಡಾ ಅವಕಾಶ ಇಲ್ಲ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ತಿಳಿಸಿದ್ದಾರೆ. `ಸಾರ್ವಜನಿಕರು ಮಣ್ಣಿನಿಂದ ಮಾಡಿದ ಮತ್ತು ರಾಸಾಯನಿಕರಹಿತ ಬಣ್ಣ ಬಳಸಿ ತಯಾರಿಸಿದ ಗಣೇಶ ಮೂರ್ತಿಗಳನ್ನೇ ಬಳಸಬೇಕು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಜಲಮೂಲಗಳು ಕಲುಷಿತವಾಗುವುದನ್ನು ತಪ್ಪಿಸಲು ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ತಾತ್ಕಾಲಿಕವಾಗಿ ನಿರ್ಮಿಸಲಾದ ಕೃತಕ ಹೊಂಡಗಳಲ್ಲಿ ಮಾತ್ರ ಮೂರ್ತಿಗಳನ್ನು ವಿಸರ್ಜಿಸಬೇಕು. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಬೆಳಗಿನ ಅವಧಿಯಲ್ಲಿ ಶಬ್ಧ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ಮಾತ್ರ ಬಳಸಲು ಅವಕಾಶ ನೀಡಲಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆ ಸೇರಿದಂತೆ ಯಾವುದೇ ಸ್ಥಳಗಳಲ್ಲಿ ಡಿ ಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಗಮನಿಸಬೇಕು’ ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
`ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿAದ ಅಗತ್ಯ ಪೂರ್ವಾನುಮತಿಯನ್ನು ಪಡೆಯಬೇಕು. ಪ್ರತಿಷ್ಠಾಪನೆ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಬೇಕು ಮತ್ತು ಸ್ವಯಂ ಸೇವಕರನ್ನು ನಿಯೋಜಿಸಬೇಕು. ಸಾರ್ವಜನಿಕ ಪ್ರಸಾದ ವಿತರಣೆ ಮತ್ತು ಕುಡಿಯುವ ನೀರು ವಿತರಣೆಯಲ್ಲಿ ಶುಚಿತ್ವ ಕಾಪಾಡುವಂತೆ ಆಯೋಜಕರಿಗೆ ಸೂಚಿಸಬೇಕು’ ಎಂದವರು ಸೂಚಿಸಿದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತಂತೆ ಸಿಂಗಲ್ ವಿಂಡೋ ಮೂಲಕ ಎಲ್ಲಾ ಅಗತ್ಯ ಅನುಮತಿಗಳನ್ನು ಸರಳವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
`ಗಣೇಶ ಪೆಂಡಾಲ್ಗಳ ಬಳಿ ಅಗತ್ಯ ಸುರಕ್ಷಿತ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಹೆಸ್ಕಾಂ ಮತ್ತು ಆಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಹಬ್ಬದ ಸಂದರ್ಭದಲ್ಲಿ ಈಗಾಗಲೇ ಅನುಮತಿ ಪಡೆದಿರುವವರು ತಮಗೆ ನಿಗಧಿಪಡಿಸಿದ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು’ ಎಂದರು. `ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಮಾಡಿದ ಗಣೇಶ ಮೂರ್ತಿಗಳ ಮಾರಾಟ ಮತ್ತು ಬಳಕೆಯ ನಿಷೇಧ ಮತ್ತು ಗಣೇಶ ಮೂರ್ತಿಗಳ ವಿಸರ್ಜನೆ ಕ್ರಮಗಳ ಬಗ್ಗೆ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು’ ಎಂದರು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್. ಭಟ್ಕಳ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಣು ಗುಪ್ತಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ ಪಂ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಪರಿಸರ ಅಧಿಕಾರಿ ಗಣಪತಿ ಹೆಗಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವರ್ಚವಲ್ ಮೂಲಕ ಎಲ್ಲಾ ವಿಭಾಗಗಳ ಡಿವೈಎಸ್ಪಿ ಗಳು ತಾಲೂಕುಗಳ ತಹಸೀಲ್ದಾರ್ಗಳು, ತಾ ಪಂ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.