ಬೇಡ್ತಿ-ವರದಾ ನದಿ ಜೋಡಣೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರಂತರ ಪ್ರಯತ್ನ ಮಾಡುತ್ತಿದ್ದು, ಬಿಜೆಪಿ ಪಕ್ಷದಿಂದ ಆಯ್ಕೆಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಯೋಜನೆ ವಿರುದ್ಧ ತಿರುಗಿ ಬಿದ್ದಿದ್ದಾರೆ. `ಯಾವುದೇ ಕಾರಣಕ್ಕೂ ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದ ಮೇಲೆ ಅವೈಜ್ಞಾನಿಕ ಯೋಜನೆ ಪ್ರಭಾವ ಬೀರಲು ಬಿಡುವುದಿಲ್ಲ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
`ಕೆಲವರು ತಪ್ಪು ಕಲ್ಪನೆಯಿಂದ ನದಿ ಜೋಡಣೆಗೆ ವಿರೋಧ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಹ ನದಿ ಜೋಡಣೆಗೆ ಆಸಕ್ತಿವಹಿಸಿದ್ದಾರೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಯೋಜನೆಯನ್ನು ವಿರೋಧಿಸಿದ್ದು, ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. `ಕೇಂದ್ರ ಸರ್ಕಾರ ನೀಡುವ ಜಲ ಸಂಪನ್ಮೂಲ ಯೋಜನೆಯ ಅನುದಾನದ ಆಸೆಗಾಗಿ ಅಮೂಲ್ಯ ಕೃಷಿ ಹಾಗೂ ಅರಣ್ಯ ಸಂಪತ್ತು ಬಲಿಕೊಡುವುದು ಅಕ್ಷಮ್ಯ ಅಪರಾಧ’ ಎಂದು ಕಾಗೇರಿ ಹೇಳಿದ್ದಾರೆ.
`ಉತ್ತರ ಕನ್ನಡ ಜಿಲ್ಲೆಯ ಜೀವನಾಡಿಗಳ ಮೇಲೆ ನೇರ ಪರಿಣಾಮ ಬೀರುವ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಮುಂದಾಗಿರುವುದು ಅವಿವೇಕದ ನಿರ್ಧಾರ. ಜನಜೀವನ ಮತ್ತು ಇಡೀ ಪರಿಸರವನ್ನು ನಾಶಮಾಡುವ ಈ ಯೋಜನೆ ಕಾರ್ಯಸಾಧುವಲ್ಲ ಎಂದು ತಿರಸ್ಕರಿಸುವ ಬದಲು ರಾಜ್ಯ ಸರ್ಕಾರವು ಇದಕ್ಕೆ ಮನ್ನಣೆ ನೀಡುತ್ತಿರುವುದು ಸಂಶಯಕ್ಕೆ ಕಾರಣ’ ಎಂದವರು ಹೇಳಿದ್ದಾರೆ.
`ನೈಸರ್ಗಿಕವಾಗಿ ಬೀಳುವ ಮಳೆಯಿಂದಲೇ ಇಲ್ಲಿನ ರೈತರು ಹಾಗೂ ಪರಿಸರ ಬದುಕುತ್ತಿದ್ದು, ಬೇಸಿಗೆಯ ಅವಧಿಯಲ್ಲಿ ಈ ಭಾಗದಲ್ಲಿಯೇ ತೀವ್ರ ನೀರಿನ ಕೊರತೆ ಇರುತ್ತದೆ. ಇಲ್ಲಿನ ಜನರಿಗೆ ನೀರಿನ ಅವಶ್ಯಕತೆಯಿರುವಾಗ ಇಲ್ಲಿನ ನೀರನ್ನು ತೆಗೆದುಕೊಂಡು ಹೋಗಿ ವರದಾ ನದಿಗೆ ಸೇರಿಸುವುದು ಅವೈಜ್ಞಾನಿಕ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ವಿವರ ನೀಡಿದ್ದಾರೆ. `ಜಿಲ್ಲೆಯ ನೈಸರ್ಗಿಕ ಸಂಪತ್ತನ್ನು ಬಲಿಗೊಟ್ಟು ಪಡೆಯುವ ಯಾವುದೇ ಅಭಿವೃದ್ಧಿ ನಮಗೆ ಬೇಕಿಲ್ಲ. ಜನವಿರೋಧಿ ಯೋಜನೆಯನ್ನು ಮುಂದುವರಿಸಿದರೆ ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಕೆ ನೀಡಿದ್ದಾರೆ.