`ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನೊಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮೂಲಭೂತ ಸೌಕರ್ಯದ ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಸೂಚಿಸಿದ್ದಾರೆ. `ಈ ಬಾರಿ ಪರೀಕ್ಷಾ ಹಾಜರಾತಿಯೂ ಶೇ 100ರಷ್ಟಿರಬೇಕು. ಫಲಿತಾಂಶವೂ ಶೇ 10ರರಷ್ಟು ದಾಖಲಾಗಬೇಕು. ಅದಕ್ಕೆ ಅಗತ್ಯ ಎಲ್ಲಾ ಸಿದ್ಧತೆಯನ್ನು ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದವರು ಹೇಳಿದ್ದಾರೆ.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತ ಪೂರ್ವ ಸಿದ್ದತಾ ಸಭೆ ನಡೆಸಿದ ಅವರು `ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿಯ ಜಿಲ್ಲೆಯಲ್ಲಿ ಒಟ್ಟು 19,988 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದಾರೆ. ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಈ ಬಾರಿ ಶಿಕ್ಷಣ ಇಲಾಖೆವತಿಯಿಂದ ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದು, ಪರೀಕ್ಷೆಗೆ ಹಾಜರಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತೀರ್ಣರಾಗುವ ರೀತಿಯಲ್ಲಿ ಅವರನ್ನು ಸಿದ್ದಗೊಳಿಸಲಾಗಿದ್ದು, ಪರೀಕ್ಷಾ ಹಾಜರಾತಿಯು ಶೇ 100 ಆದಲ್ಲಿ ಫಲಿತಾಂಶವು ಶೇ 100 ಬರಬಹುದಾದ ಎಲ್ಲಾ ಸಾಧ್ಯತೆಗಳಿರುವ ಕಾರಣ ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು’ ಎಂದು ತಿಳಿಸಿದರು.
`ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರು ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾದ ಮಾರ್ಗದಲ್ಲಿ ಮತ್ತು ನಿಗಧಿತ ಸಮಯಕ್ಕೆ ಬಸ್ ವ್ಯವಸ್ಥೆ ಒದಗಿಸಬೇಕು. ವಿದ್ಯಾರ್ಥಿಗಳು ಸಾಕಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪುವ ನಿಟ್ಟಿನಲ್ಲಿ ಬಸ್ಗಳಿಗೆ ಸಮಯ ನಿಗಧಿಪಡಿಸಬೇಕು’ ಎಂದು ಸೂಚಿಸಿದರು. `ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮತ್ತು ಪರೀಕ್ಷಾ ಮಂಡಳಿಯು ಸೂಚಿಸಿರುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು. ಯಾವುದೇ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸಬೇಕು’ ಎಂದರು. `ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ, ಜಿ ಪಿ ಎಸ್ ಅಳವಡಿಸಿದ ವಾಹನಗಳ ಮೂಲಕ ಪರೀಕ್ಷೆ ಕೇಂದ್ರಗಳಿಗೆ ತಲುಪಿಸಲು ಹಾಗೂ ಎಲ್ಲಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷಾ ಪ್ರಕ್ರಿಯೆಗಳು ಆನ್ಲೈನ್ ನಲ್ಲಿ ನಡೆಯುವುದರಿಂದ ಎಲ್ಲಾ ಕೇಂದ್ರಗಳಲ್ಲಿ ಇಂಟರ್ನೆಟ್ ನ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು. `ಪರೀಕ್ಷಾ ಮಂಡಳಿಯ ಮಾರ್ಗಸೂಚಿಯಂತೆ ಪರೀಕ್ಷೆಗಳನ್ನು ಸಿಸಿಟಿವಿ ಕಣ್ಗಾವಲುನಲ್ಲಿ ನಡೆಸಬೇಕು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆಗೆ ಮಾಡಬೇಕು. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್,ಇಯರ್ಫೋನ್,ಮೈಕ್ರೋಫೋನಗಳು, ಬ್ಲೂಟೂತ್ ಸಾಧನ, ಅನುಮತಿಸಲಾಗುವುದಿಲ್ಲ. ಸಿಬ್ಬಂದಿಗೂ ಮೊಬೈಲ್ ಬಳಕೆ ಅವಕಾಶವಿಲ್ಲ. ಫೋಟೋಗ್ರಾಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ’ ಎಂದರು.
`ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಗಳನ್ನು ಒದಗಿಸಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತಗೊಳಿಸದಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ತಾಪಮಾನ ಹೆಚ್ಚಿರುವ ಕಾರಣ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಓ ಆರ್ ಎಸ್ ಪಾಕೆಟ್ ಗಳೊಂದಿಗೆ ಸಿಬ್ಬಂದಿ ನಿಯೋಜಿಸಿ’ ಎಂದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಧಿಕಾರಿ ದಿಲೀಶ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ನಾಯ್ಕ ಹಾಗೂ ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್ಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಅಧಿಕಾರಿಗಳು ಇದ್ದರು.