ಹೊನ್ನಾವರದ ಪ್ರಮುಖ ಪ್ರವಾಸೋದ್ಯಮ ಆಕರ್ಷಣೆಯಾಗಿದ್ದ ನದಿ ನೀರಿನ `ಪ್ರೀ ವೆಡ್ಡಿಂಗ್ ಶೂಟ್’ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅದರೊಂದಿಗೆ ಈ ಕ್ಷಣದಿಂದಲೇ ಜಿಲ್ಲೆಯಲ್ಲಿನ ಎಲ್ಲಾ ಜಲಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮುಖ್ಯ ಕಡಲತೀರ, ಓಂ ಬೀಚ್, ಕುಡ್ಲೆ ಬೀಚ್, ಹಾಫ್ಮೂನ್ ಬೀಚ್, ಪ್ಯಾರಡೈಸ್ ಬೀಚ್, ಭಟ್ಕಳದ ಮುರುಡೇಶ್ವರ ಬೀಚ್ ಮತ್ತು ಕಾರವಾರ ಕಡಲತೀರದಲ್ಲಿ ಪ್ರವಾಸಿ ಬೋಟಿಂಗ್ ಹಾಗೂ ಜಲಸಾಹಸ ಕ್ರೀಡೆ ಚಟುವಟಿಕೆಗೆ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು. ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಚಟುವಟಿಕೆ ನಡೆಸಲೂ ಅನುಮತಿ ನೀಡಲಾಗಿತ್ತು. ಹಾಗೆಯೇ ಕುಮಟಾ ತಾಲೂಕಿನ ತದಡಿ ಅಘನಾಶಿನಿ ನದಿ ತೀರ, ಹೊನ್ನಾವರ ಮತ್ತು ಕಾಸರಕೋಡು ಭಾಗದ ಶರಾವತಿ ಹಿನ್ನೀರಿನಲ್ಲಿ ಪ್ರವಾಸಿ ಬೋಟಿಂಗ್ ಚಟುವಟಿಕೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಸದ್ಯ ಅದೆಲ್ಲವನ್ನು ಸ್ಥಗಿತಗೊಳಿಸಲಾಗಿದೆ.
ಹವಾಮಾನ ವೈಪರಿತ್ಯ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ನಿರ್ಬಂಧಿಸಲಾಗಿದೆ. ಮೇ 19ರಿಂದ ಮಳೆಗಾಲ ಮುಗಿಯುವವರೆಗೂ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಗಳಲ್ಲಿನ ಎಲ್ಲಾ ಜಲ ಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಹೀಗಾಗಿ ಬೋಟಿಂಗ್, ಸ್ಕೂಬಾ ಡೈವಿಂಗ್ ಸೇರಿದಂತೆ ಎಲ್ಲ ಬಗೆಯ ನೀರಿನ ಆಟಗಳಿಗೆ ಕಡಿವಾಣ ಬಿದ್ದಿದೆ. ನದಿ ನೀರಿನಲ್ಲಿ ದೋಣಿಗಳ ಮೂಲಕ ಪ್ರೀ-ವೆಡ್ಡಿಂಗ್ ಸೆಟ್ಗಳ ಅಳವಡಿಕೆಗೂ ನಿರ್ಬಂಧವಿಧಿಸಲಾಗಿದೆ.
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ. ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮಳೆಗಾಲ ಮುಗಿಯುವವರೆಗೂ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ನಿಷೇಧದ ಆದೇಶ ಹೊರಡಿಸಿದೆ.ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಹಾಗೂ ನದಿ ನೀರಿನಲ್ಲಿ ಪ್ರೀ ವೆಡ್ಡಿಂಗ್ ಫೋಟೋಗ್ರಾಫಿಗಾಗಿ ಹಾತೊರೆಯುತ್ತಿದ್ದವರಿಗೆ ನಿರಾಸೆಯಾಗಿದೆ.