ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಸಿಎನ್ಜಿ ದರ ಏರಿಕೆಯನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಉತ್ತರ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಅಂಕೋಲಾ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಬಳಿಕ ಕಳೆದ 10 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡಿರುವುದರಿಂದ ರೈತರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ವಿಶ್ವದ ಅನೇಕ ದೇಶಗಳು ತಮ್ಮ ನಾಗರಿಕರ ಹಿತರಕ್ಷಣೆಗೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಭಾರತ ಸರ್ಕಾರ ಮಾತ್ರ ದುಡಿಯುವ ಜನರ ಬದುಕು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಜನಹಿತಕ್ಕಿಂತ ಚುನಾವಣಾ ರಾಜಕಾರಣಕ್ಕೇ ಹೆಚ್ಚು ಆದ್ಯತೆ ನೀಡಲಾಗುತ್ತಿದೆ.
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಸುವ ಬದಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಗಳನ್ನು ಕಡಿತಗೊಳಿಸಬೇಕು. ಜನರು ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚುವರಿ ಹೊರೆ ಹಾಕಬಾರದು ಎಂದು ಸಂಘ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯಕ, ಜಿಲ್ಲಾ ಉಪಾಧ್ಯಕ್ಷ ತಿಮ್ಮಪ್ಪ ಗೌಡ, ಗೌರೀಶ ನಾಯಕ, ಜಂಟಿ ಕಾರ್ಯದರ್ಶಿ ಸಂತೋಷ ನಾಯ್ಕ, ಜಿಲ್ಲಾ ಸಮಿತಿ ಸದಸ್ಯರಾದ ಬುಜಂಗ ಚಿಬ್ಲಕರ, ಬಾಬು ಹನ್ಗೇಕರ, ಗಣಪತಿ ಸಿದ್ದಿ, ಉದಯ ನಾಯ್ಕ, ನಿತ್ಯಾನಂದ ಎನ್.ಸಿದ್ದಿ, ವಿನೋದ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.