ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಜನ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸುತ್ತಿದ್ದರೂ ಸರ್ಕಾರ ಮಾತ್ರ ಆ ಯೋಜನೆ ಪರವಾಗಿದೆ. `ಈ ಯೋಜನೆ ತಡೆಯುವಂತೆ ರಾಜ್ಯ ಉಚ್ಚ ನ್ಯಾಯಾಲಯದ ತಡೆಯಿದ್ದರೂ ಕೇoದ್ರ ಸರ್ಕಾರದ ಸೆಂಟ್ರಲ್ ಎಂಪವರ್ಡ್ ಕಮಿಟಿ ಕದ್ದು ಮುಚ್ಚಿ ಸ್ಥಳ ಭೇಟಿ ಮಾಡಿದೆ’ ಎಂದು ರಾಷ್ಟ್ರಭಕ್ತರ ಬಳಗದ ಮುಖ್ಯಸ್ಥ ಕೆ ಎಸ್ ಈಶ್ವರಪ್ಪ ಅವರು ಗುಡುಗಿದ್ದಾರೆ.
`ಪರಿಸರ ಮಾರಕ ಯೋಜನೆಯ ವಿರುದ್ಧ ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತ ಬಂದಿದೆ. ಅಲ್ಲದೆ ಕೇಂದ್ರ ಸರ್ಕಾರದ ಪರಿಸರ ಮತ್ತು ಹವಾಮಾನ ಇಲಾಖೆಯ ಸಂಶೋಧನಾ ಮುಖ್ಯಸ್ಥರಾದ ಪ್ರಣೀತಾ ಕೌರ್ ಹಾಗೂ ಇತರ ಕೇಂದ್ರ ಸರ್ಕಾರದ ಪರಿಸರ ಮಂತ್ರಾಲಯದ ಮುಖ್ಯಸ್ಥರೇ ಪಶ್ಚಿಮಘಟ್ಟದ ಸೆರಗಿನಲ್ಲಿರುವ ಶರಾವತಿ ಕಣಿವೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದು ಎಂಬ ಸ್ಪಷ್ಟ ಅಭಿಪ್ರಾಯ ನೀಡಿದ್ದಾರೆ’ ಎಂದು ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. `ರಾಜ್ಯ ಉಚ್ಛ ನ್ಯಾಯಾಲಯವು ಕೂಡ ಈ ಯೋಜನೆಗೆ ತಡೆಯಾಜ್ಞೆ ನೀಡಿದೆ. ಆದಾಗಿಯೂ, ಸಿಇಸಿ ಕಮಿಟಿಯವರು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಇಲ್ಲಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆಪಿಸಿಎಲ್ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಯೋಜನೆಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸುವ ಬಗ್ಗೆ ಮೇ 18ರಂದು ಹೊರಡಿಸಿದ ಕೇಂದ್ರ ಸರ್ಕಾರದ ಪರಿಸರ ಮಂತ್ರಾಲಯದ ಪತ್ರವೊಂದರಲ್ಲಿ ತಿಳಿಸಿದೆ’ ಎಂದು ಅವರು ಆಕ್ಷೇಪಿಸಿದರು.
`ಒಂದು ಸಾಂವಿಧಾನಿಕ, ಸ್ವಾಯತ್ತ ಸಂಸ್ಥೆ ಸ್ಥಳೀಯ ಯೋಜನಾ ಪ್ರದೇಶಕ್ಕೆ ಬರುವ ಸಂದರ್ಭದಲ್ಲಿ ಯೋಜನೆಯ ವಿರುದ್ಧ ಜನಾಭಿಪ್ರಾಯ, ಉಗ್ರ ಹೋರಾಟ ಮಾಡುತ್ತಿರುವ ಸಂಘಟನೆಗಳನ್ನೇ ನಿರ್ಲಕ್ಷಿಸುತ್ತಿರುವುದು ಶೋಚನೀಯ. ಸಮಿತಿಯ ಅಧ್ಯಯನದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕೊಡದಿರಲು ಕಾರಣವೇನು?’ ಎಂದು ಪ್ರಶ್ನಿಸಿದರು. `ಈಗಾಗಲೇ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ 75 ಸಾವಿರಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇಂತಹದ್ದರಲ್ಲಿ ಸಿಇಸಿ ಸೌಜನ್ಯಕ್ಕಾದರೂ ಇಲ್ಲಿಯ ಭೇಟಿಯ ಮಾಹಿತಿಯನ್ನು ಜನರಿಗೆ ಕೊಡಬೇಕಿತ್ತು’ ಎಂದವರು ಆಕ್ರೋಶವ್ಯಕ್ತಪಡಿಸಿದರು.