`ಉತ್ತರ ಕನ್ನಡ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಬೆಳೆಗಾರರಿಗೆ ಎಲ್ಲಾ ರೀತಿಯ ಬೆಂಬಲ ನೀಡಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ.
ಹಳಿಯಾಳದಲ್ಲಿ ಸಭೆ ನಡೆಸಿದ ಅವರು `ಕಬ್ಬು ಬೆಳೆಗಾರರ ಬಹುಕಾಲದ ಬೇಡಿಕೆಯಾದ ಕಬ್ಬು ಕಾರ್ಖಾನೆಯ ಮುಂಭಾಗದಲ್ಲಿ ಕಬ್ಬು ತೂಕ ಅಳತೆ ಮಾಡುವ ಯಂತ್ರ ಅಳವಡಿಕೆ ಬೇಡಿಕೆ ಕುರಿತು ಸ್ಪಷ್ಠ ನಿರ್ಧಾರ ಪ್ರಕಟವಾಗಬೇಕು. ಈ ಬಾರಿಯ ಕಬ್ಬು ನುರಿಯುವ ಹಂಗಾಮು ಪ್ರಾರಂಭವಾಗುವ ಒಳಗೆ ಕಾರ್ಖಾನೆ ಮುಂಭಾಗ ತೂಕ ಮಾಡುವ ಯಂತ್ರ ಅಳವಡಿಸಬೇಕು’ ಎಂದು ಸೂಚಿಸಿದರು. `ಕಬ್ಬು ಕಟಾವಣೆ ಮಾಡಲಾದ 2023-24ನೇ ಸಾಲಿನಲ್ಲಿ ರೈತರಿಂದ ಹೆಚ್ಚುವರಿ ಆಕರಣೆ ಮಾಡಲಾದ ಹೆಚ್ ಅಂಡ್ ಟಿ ದರ ರೂ 256ನ್ನು ರೈತರಿಗೆ ಮರುಪಾವತಿ ಮಾಡುವಂತೆ ಕಬ್ಬು ಆಯುಕ್ತರು ಆದೇಶ ಮಾಡಿದ್ದಾರೆ. ಅದಾಗಿಯೂ ಆ ಹಣ ಪಾವತಿ ಆಗಿಲ್ಲ’ ಎಂದು ರೈತರು ದೂರಿದರು.
`2023-24ರಲ್ಲಿನ ಹೆಚ್ಚುವರಿ ಮೊತ್ತ 256 ರೂಗಳಂತೆ ಒಟ್ಟು 26 ಕೋಟಿ ಮೊತ್ತವನ್ನು ಕಾರ್ಖಾನೆಯವರು ರೈತರಿಗೆ ನೀಡುವಂತೆ ಕಬ್ಬು ಆಯುಕ್ತರಿಂದ ನೀಡಿದ್ದ ಆದೇಶವನ್ನು ಪಾಲನೆ ಮಾಡದ ಬಗ್ಗೆ ನೋಟಿಸ್ ನೀಡಲಾಗಿದೆ. ಕಾರ್ಖಾನೆಯವರು ಇದರ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿ ಕೂಡ ಎರಡು ವಾರಗಳ ತಡೆಯಜ್ಞೆ ನೀಡಲಾಗಿದೆ. ಅದನ್ನು ಧಾರವಾಡದ ನ್ಯಾಯಾಲಯಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
`ಕಳೆದ ವರ್ಷದಂತೆ ಈ ವರ್ಷ ಕೂಡ ಕಬ್ಬು ಕಟಾವನೆ ಕುರಿತು ಆದ್ಯತಾ ಪಟ್ಟಿ ಪ್ರಕಟ ಮಾಡಬೇಕು. ಇಲ್ಲಿ ಮಳೆಗಾಲ ಸಮಯದಲ್ಲಿ ಹೆಚ್ಚಾಗಿ ರಸ್ತೆಗಳು ಹಾಳಗುವುದು ಸಾಮಾನ್ಯವಾಗಿದ್ದು, ಕಳೆದ ವರ್ಷ ಮಾಡಲಾದ ರಸ್ತೆಗಳು ಹಾಳಾಗಿರುವ ನಿರ್ದಿಷ್ಟ ರಸ್ತೆಗಳನ್ನು ಗುರುತಿಸಲಾಗಿದೆ. ಅದನ್ನು ಗುತ್ತಿಗೆದಾರರೆ ನಿರ್ವಹಣೆ ಮಾಡಬೇಕು. ಸರ್ಕಾರದಿಂದ ಯಾವುದೇ ಹೆಚ್ಚುವರಿ ಅನುದಾನ ನೀಡುವುದಿಲ್ಲ. ಒಂದು ವೇಳೆ ನಿರ್ವಹಣೆ ಮಾಡದೇ ಇದ್ದಲ್ಲಿ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು; ಎಂದು ಡೀಸಿ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಉಪವಿಭಾಗಾಧಿಕಾರಿ ಶ್ರವಣಕುಮಾರ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಧಾರವಾಡದ ಉಪ ವಿಭಾಗಾಧಿಕಾರಿ ಸಲೀಂ ಹುಸೇನ್ ಇತರರಿದ್ದರು.